ಏಕಪಕ್ಷೀಯ ಕ್ರಮ ಬೇಡ – ತೊಂದರೆ ಕೊಡಬೇಡಿ: ಭಾರತಕ್ಕೆ ಚೀನಾ ಎಚ್ಚರಿಕೆ
ಸೋಮವಾರ ರಾತ್ರಿ ಪೂರ್ವ ಲಡಾಕ್ ನಲ್ಲಿ ನಡೆದ ಚೀನಾ ಮತ್ತು ಭಾರತೀಯ ಸೈನಿಕರ ನಡುವಿಗೆ ಘರ್ಷಣೆಯಲ್ಲಿ ಸೇನಾಧಿಕಾರಿ ಸೇರಿದಂತೆ ಮೂವರು ಸೈನಿಕರು ಹತ್ಯೆಯಾಗಿದ್ದಾರೆ. ಘಟನೆ ನಡೆದ ನಂತರ ಭಾರತವು ಏಕಪಕ್ಷೀಯವಾಗಿ ಕ್ರಮ ಕೈಗೊಳ್ಳಬಾರದು ಹಾಗೂ ತೊಂದರೆ ಕೊಡಬಾರದು ಎಂದು ಚೀನಾದ ವಿದೇಶಾಂಗ ಸಚಿವಾಲಯ ಭಾರತಕ್ಕೆ ಎಚ್ಚರಿಕೆ ನೀಡಿದೆ.
ಸೋಮವಾರ ಮಧ್ಯ ರಾತ್ರಿ ಗಾಲ್ವಾನಾ ಕಣಿವೆಯಲ್ಲಿ ಭಾರತ-ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ ಒಬ್ಬರು ಸೇನಾ ಅಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಹೇಳಿಕೆ ನೀಡಿದ ಬೆನ್ನಲ್ಲೇ, ಚೀನಾ ವಿದೇಶಾಂಗ ಸಚಿವಾಲಯವು ಭಾರತಕ್ಕೆ ಪ್ರತಿಕ್ರಿಯಿಸಿದೆ ಎಂದು ರಾಯ್ಟರ್ಸ್ ವರದಿ ಮಾಡಿರುವುದಾಗಿ ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಗಾಲ್ವಾನ್ ಕಣಿವೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಂತೆ ಸೋಮವಾರ ರಾತ್ರಿ ಓರ್ವ ಅಧಿಕಾರಿ ಸೇರಿದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಬಿಗಡಾಯಿಸದಂತೆ ಭಾರತ ಹಾಗೂ ಚೀನಾದ ಹಿರಿಯ ಮಿಲಿಟರಿ ಅಧಿಕಾರಿಗಳು ಸಭೆ ನಡೆಸುತ್ತಿರುವುದಾಗಿ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಐದು ವಾರದಿಂದಲೂ ಗಾಲ್ವಾನ್ ಕಣಿವೆಯಲ್ಲಿ ಉಭಯ ರಾಷ್ಟ್ರಗಳು ಹೆಚ್ಚಿನ ಸಂಖ್ಯೆಯ ಸೇನಾ ಜಮಾವಣೆ ಮಾಡುವ ಮೂಲಕ ಪರಿಸ್ಥಿತಿ ಬಿಗಡಾಯಿಸಿತ್ತು. ಗಾಲ್ವಾನ್ ಕಣಿವೆಯಿಂದ ಎರಡು ಕಡೆಯ ಯೋಧರು ಹೊರಹೋಗಲು ನಿರ್ಧರಿಸಿದ್ದಾರೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಹೇಳಿಕೆ ನೀಡಿದ್ದ ಬೆನ್ನಲ್ಲೇ ಮೂವರು ಭಾರತೀಯ ಯೋಧರ ಹತ್ಯೆ ನಡೆದಿದೆ.