ಸಿಂಧಿಯಾ ಭದ್ರಕೋಟೆ ಭೇದಿಸಲು ಕಾಂಗ್ರೆಸ್ ಪರವಾಗಿ ಸಚಿನ್ ಮಧ್ಯಪ್ರದೇಶದಲ್ಲಿ ಪ್ರಚಾರ!
ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ, ರಾಜಸ್ಥಾನ ರಾಜಕೀಯದಲ್ಲಿ ಬಿಕ್ಕಟ್ಟು ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಮಧ್ಯಪ್ರದೇಶದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಬಿಜೆಪಿಯನ್ನು ಅಧಿಕಾರಕ್ಕೇರಿಸಲು ಜ್ಯೋತಿರಾಧಿತ್ಯ ಸಿಂಧಿಯಾ ಬಣದವರು ರಾಜೀನಾಮೆ ನೀಡಿದ 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಸಚಿನ್ ಪೈಲಟ್ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ.
28 ವಿಧಾನಸಭಾ ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳು ಗ್ವಾಲಿಯರ್ ಹಾಗೂ ಚಂಬಲ್ ಪ್ರದೇಶದಲ್ಲಿದ್ದು, ಈ ಕ್ಷೇತ್ರಗಳು ಹಾಲಿ ಬಿಜೆಪಿ ನಾಯಕ, ಮಾಜಿ ಕಾಂಗ್ರೆಸ್ಸಿಗ ಸಿಂಧಿಯಾ ಅವರ ಭದ್ರಕೋಟೆಗಳು ಎಂದು ಹೇಳಲಾಗಿದೆ.
ಈ ಕ್ಷೇತ್ರಗಳಲ್ಲಿ ತಮ್ಮ ಮಿತ್ರನೂ ಆಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ ಕಾಂಗ್ರೆಸ್ ಪರವಾಗಿ ಸಚಿನ್ ಪೈಲಟ್ ಪ್ರಚಾರದ ಹೊಣೆ ಹೊತ್ತಿದ್ದಾರೆ.
ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್, ರಾಜಸ್ಥಾನದ ಮಾಜಿ ಡಿಸಿಎಂ ಪೈಲಟ್ ಅವರನ್ನು ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಮನವಿ ಮಾಡಲಾಗಿದ್ದು, ಇದಕ್ಕೆ ಪೈಲಟ್ ಸಹ ಒಪ್ಪಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಉಪಚುನಾವಣೆಗೆ ಚುನಾವಣಾ ಆಯೋಗ ಇನ್ನಷ್ಟೇ ದಿನಾಂಕವನ್ನು ಘೋಷಣೆ ಮಾಡಬೇಕಿದೆ.
ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕನ್ನಡದಲ್ಲಿ ಪ್ರಾಮಾಣವಚನ ಸ್ವೀಕರಿಸಿದ ಹೆಚ್ಡಿಡಿ; ಹಿಂದಿ ಹೇರಿಕೆ ಸಹಿಸಲ್ಲ ಎಂದ ಸುಮಲತಾ!