ಅನರ್ಹ ಶಾಸಕರಿಗೆ ಬಿಗ್ ರಿಲೀಫ್ : ಉಪಚುನಾವಣೆಗೆ ಸುಪ್ರೀಂ ತಡೆ
ರಾಜ್ಯದ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು 15 ಮಂದಿ ಅತಂತ್ರ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಇತ್ಯರ್ಥ ಆದ ಮೇಲೆ ಚುನಾವಣೆ ನಡೆಯಲಿ ಎಂದು ಹೇಳಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದೆ.
ಹೌದು.. ಕೇಂದ್ರ ಚುನಾವಣಾ ಆಯೋಗ, ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿತ್ತು. ಇದರಿಂದಾಗಿ ಅನರ್ಹ ಶಾಸಕರು ಆತಂಕಗೊಂಡಿದ್ದರು. ಇದೀಗ ತಡೆಯಾಜ್ಞೆ ಸಿಕ್ಕಿರುವ ಕಾರಣ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆದರೆ ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನದ ಕುರಿತು ನ್ಯಾಯಾಲಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ ವಿಚಾರಣೆ ಪೂರ್ಣಗೊಳ್ಳುವವರೆಗೂ ಉಪ ಚುನಾವಣೆ ನಡೆಸುವಂತಿಲ್ಲವೆಂದು ನ್ಯಾಯಾಲಯ ಹೇಳಿದೆ.
ಉಪ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕರಿಗೆ ಸುಪ್ರೀಂ ಆದೇಶ ಶಾಕ್ ನೀಡಿದ್ದು, ಆದರೆ ಆಡಳಿತಾರೂಢ ಬಿಜೆಪಿ ನಾಯಕರಿಗೆ ಇಂದಿನ ಆದೇಶ ಒಂದಷ್ಟು ಸಮಾಧಾನ ತಂದಿದೆ.
ಚುನಾವಣಾ ಆಯೋಗದ ಘೋಷಣೆಯಂತೆ ಹಿರೇಕೆರೂರು ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಯಶವಂತಪುರದ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡರ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿತ್ತು.