ಆಪರೇಷನ್ ಕಮಲದ ಆಡಿಯೋ ಬಹಿರಂಗ ಪಡಿಸಿದ್ದಕ್ಕೆ ನನಗೆ ಜೀವ ಬೆದರಿಕೆ – ಶರಣಗೌಡ ಕಂದಕೂರ
ಆಪರೇಷನ್ ಕಮಲದ ಆಡಿಯೋ ಬಹಿರಂಗ ಪಡಿಸಿದ್ದಕ್ಕೆ ನನಗೆ ಜೀವ ಬೆದರಿಕೆಯಿದೆ ಎಂದು ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಪುತ್ರ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನಾ ವೇಳೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಆಪರೇಷನ್ ಕಮಲ ಪ್ರಕರಣ ಮನಸ್ಸಿನಲ್ಲಿಟ್ಟುಕೊಂಡು ನನ್ನ ಮೇಲೆ ಹಗೆ ಸಾಧಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
ನನ್ನ ಪ್ರತಿಯೊಂದು ಚಲನ, ವಲನಗಳನ್ನು ಅಪರಿಚಿತ ವ್ಯಕ್ತಿಗಳು ಗಮನಿಸುತ್ತಿದ್ದಾರೆ. ನಾನು ಎಲ್ಲಿಗೆ ಹೋದರೂ ಕೆಲ ಮುಸುಕುಧಾರಿ ವ್ಯಕ್ತಿಗಳು ನನ್ನನ್ನು ಹಿಂಬಾಲಿಸುತ್ತಿದ್ದಾರೆ. ಅಲ್ಲದೆ ಇತ್ತೀಚೆಗೆ ನನ್ನ ಫೋನ್ ಸಹ ಟ್ಯಾಪ್ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದರು.