ಜಾಮೀನು ಸಿಕ್ಕ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾದ ಡಿಕೆ ಶಿವಕುಮಾರ್
ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.
ನವದೆಹಲಿಯ ಜನಪಥ್ ರಸ್ತೆಯಲ್ಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್ ಗೆ ಸಹೋದರ ಡಿ.ಕೆ ಸುರೇಶ್ , ರಂಗನಾಥ್ , ರವಿ ಸಾಥ್ ನೀಡಿದ್ದಾರೆ. ಇದಕ್ಕೂ ಮೊದಲು ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನ ಭೇಟಿಯಾಗಿದ್ದರು.
ಇನ್ನು ಮಾಜಿ ಸಚಿವ ಡಿ.ಕೆ ಶಿವಕುಮಾರ್ ನಾಳೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಾಳೆ ಅವರು ದೆಹಲಿಯಲ್ಲೇ ಉಳಿಯಲಿದ್ದು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.