ಡಿಕೆಶಿ ತಾಯಿ ಕಣ್ಣೀರು – ಬಿಜೆಪಿ ಕುತಂತ್ರಕ್ಕೆ ತಕ್ಕ ಪಾಠ ಕಲಿಸಿದೆ: ಕುಮಾರಸ್ವಾಮಿ
ಕೇಂದ್ರ ಬಿಜೆಪಿ ಸರ್ಕಾರ ಪಿತೂರಿ ಮಾಡಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದೆ. ಈ ಸಂದರ್ಭದಲ್ಲಿ ಅವರ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿಯನ್ನು ಸುಮ್ಮನೆ ಬಿಡುವುದಿಲ್ಲ. ತಕ್ಕ ಪಾಠ ಕಲಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಕನಕಪುರದ ಸಾತನೂರಿನ ಕೋಡಿಹಳ್ಳಿಯಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ಮಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.
ಗೌರಮ್ಮ ಅವರಿಗೆ ಸಾಂತ್ವಾನ ಹೇಳಿದ ಕುಮಾರಸ್ವಾಮಿ, ‘ಯಾವುದಕ್ಕೂ ಹೆದರಬೇಡಿ, ಈ ಎಲ್ಲ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಅವರು ಹೊರ ಬರುತ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ಎರಡು ದಿನ. ನಾವೆಲ್ಲರು ನಿಮ್ಮ ಜತೆ ಇದ್ದೇವೆ. ಹೆಚ್ಚು ಚಿಂತಿಸಬೇಡಿ. ಆರೋಗ್ಯದ ಕಡೆ ಗಮನಹರಿಸಿ ಎಂದು ಸಮಾಧಾನ ಮಾಡಿದರು.
ನಂತರ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ, ‘ಡಿಕೆ ಶಿವಕುಮಾರ್ ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಕೊಂಡ ಪರಿಣಾಮ ಕೇಂದ್ರ ಸರ್ಕಾರ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಸೇಡಿನ ರಾಜಕಾರಣ ಮಾಡುತ್ತಿದೆ.
ಡಿಕೆ ಶಿವಕುಮಾರ್ ನಾಲ್ಕು ದಿನಗಳ ಕಾಲ ವಿಚಾರಣೆಗೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸಿದರೂ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಅವಕಾಶ ಇಲ್ಲ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗಿದೆ. ಆದರೂ ಅವರನ್ನು ಬಂಧಿಸಿರುವುದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಸಾಕ್ಷಿ.
ಈ ತಾಯಿಯ ನೋವು ಹಾಗೂ ಕಣ್ಣೀರ ಶಾಪ ಬಿಜೆಪಿ ಕುತಂತ್ರಕ್ಕೆ ತಕ್ಕ ಪಾಠ ಕಲಿಸಿದೆ. ಅವರನ್ನು ಸರ್ವನಾಶ ಮಾಡಲಿದೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಕಾಲಚಕ್ರ ಬದಲಾಗಲಿದೆ. ನಾಳೆ ಇದೇ ಪರಿಸ್ಥಿತಿ ಬಿಜೆಪಿ ನಾಯಕರಿಗೆ ಬಂದರೆ ಆಶ್ಚರ್ಯ ಇಲ್ಲ’ ಎಂದರು.