ರಾಜ್ಯಸಭೆಗೆ ಖರ್ಗೆಯವರ ಆಯ್ಕೆಗಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒತ್ತಡವಿತ್ತು: ಡಿ.ಕೆ ಶಿವಕುಮಾರ್

ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಬೇಕು ಎಂದು ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಕಾಂಗ್ರೆಸ್ ನಾಯಕರ ಮಾತ್ರವಲ್ಲ ಬೇರೆ ಪಕ್ಷದ ನಾಯಕರೂ ನಮಗೆ ಒತ್ತಡ ಹೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

‘ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯಕ್ಕೆ ಸೀಮಿತವಾದ ನಾಯಕರಲ್ಲ. ರಾಷ್ಟ್ರಕ್ಕೆ ಸೀಮಿತವಾದ ನಾಯಕ. ಅವರಲ್ಲಿ ರಾಷ್ಟ್ರ ನಾಯಕನ ಗುಣಗಳಿವೆ. ಹೀಗಾಗಿ ಅವರು ರಾಷ್ಟ್ರದ ಆಸ್ತಿ. ಕಳೆದ ಐದು ವರ್ಷಗಳ ಕಾಲ ಅವರು ವಿರೋಧ ಪಕ್ಷದಲ್ಲಿದ್ದು ಮಾಡಿದ ಕಾರ್ಯ ಹಾಗೂ ಅವರ ಅನುಭವ ಅತ್ಯುತ್ತಮವಾದುದು. ಅದಕ್ಕೆ ಪರ್ಯಾಯವಿಲ್ಲ. ಹಾಗಾಗಿ ಖರ್ಗೆಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕೆಂದು ದೇಶದ ಮೂಲೆ ಮೂಲೆಯಿಂದ ಬೇರೆ ಪಕ್ಷಗಳ ನಾಯಕರೂ ಕೂಡ ಒತ್ತಡ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯದಿಂದ ಆಯ್ಕೆಯಾಗುವ ಖರ್ಗೆ ಅವರು ರಾಷ್ಟ್ರದ ಎಲ್ಲ ವರ್ಗದ ಜನರ ಸಮಸ್ಯೆಗೆ ಧ್ವನಿಯಾಗಿ ಹೋರಾಟ ಮಾಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ನಮ್ಮ ಪಕ್ಷಕ್ಕೆ ಶಕ್ತಿಯಾಗಿರುವ ಖರ್ಗೆ ಅವರನ್ನು ರಾಜ್ಯಸಭೆಗೆ ಕಳುಹಿಸಲು ಅವಕಾಶ ಮಾಡಿಕೊಟ್ಟ ನಮ್ಮ ನಾಯಕಿ ಸೋನಿಯಾ ಗಾಂಧಿ ಅವರಿಗೆ ನಮ್ಮ ಶಾಸಕಾಂಗ ಪಕ್ಷದ ನಾಯಕರ ನೇತೃತ್ವದಲ್ಲಿ ಎಲ್ಲ ಶಾಸಕರು ಅಭಿನಂದನೆ ಸಲ್ಲಿಸಲು ತಿರ್ಮಾನಿಸಿದ್ದು, ಇದನ್ನು ಅವರಿಗೆ ಕಳುಹಿಸಿಕೊಡುತ್ತೇವೆ’ ಎಂದು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರ ತೀರ್ಮಾನವೇ ಅಂತಿಮ:
ರಾಜ್ಯಸಭೆ ಚುನಾವಣೆಯಲ್ಲಿ ದೇವೇಗೌಡರನ್ನು ಬೆಂಬಲಿಸುವ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ವಿಚಾರದಲ್ಲಿ ನಮ್ಮ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತೆಗೆದುಕೊಳ್ಳುವ ವಿಚಾರದಲ್ಲಿ ನಾವು ಸ್ಥಳೀಯ ನಾಯಕರು ಆಕ್ಷೇಪ ಮಾಡುವುದಿಲ್ಲ. ಅವರು ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆದರೆ ಯಾವ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂದು ಅವರೇ ತೀರ್ಮಾನಿಸುತ್ತಾರೆ. ಮಾಜಿ ಪ್ರಧಾನಿಯಾದವರನ್ನು ಆಯ್ಕೆ ಮಾಡುವ ಬಗ್ಗೆ ನಾನು ಮಾತನಾಡುವುದಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ನಾವು ಬಿಜೆಪಿ ಬೆಂಬಲಿಸುವ ಪ್ರಶ್ನೆ ಇಲ್ಲ:

ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ಜಾತ್ಯಾತೀತ ಸಿದ್ದಾಂತವನ್ನು ಅನುಸರಿಸಿಕೊಂಡು ಬಂದಿದ್ದೇವೆ. ಬಿಜೆಪಿ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡಬಾರದು ಎಂದು ನಮ್ಮ ಪಕ್ಷ ಈಗಾಗಲೇ ತೀರ್ಮಾನಕ್ಕೆ ಬಂದಿದೆ. ಜಾತ್ಯಾತೀತ ಪಕ್ಷಕ್ಕೆ ಪ್ರಯೋಜನವಾಗಬೇಕು, ನಾವು ಕೇವಲ ಒಬ್ಬ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಿದ್ದು, ನಾವು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಧನ್ಯವಾದ ಅರ್ಪಿಸಿದ ಖರ್ಗೆ:
ರಾಜ್ಯಸಭೆಗೆ ನಮ್ಮನ್ನು ಆಯ್ಕೆ ಮಾಡಲು ನಿರ್ಧರಿಸಿರುವ ಎಐಸಿಸಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತುಂಬು ಹೃದಯದ ಧನ್ಯವಾದಗಳು ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಖರ್ಗೆಯವರು ತಿಳಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights