ಅನರ್ಹ ಶಾಸಕರ ಭವಿಷ್ಯ ಇಂದು ನಿರ್ಧಾರ : ಎಲ್ಲರ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ
ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಪ್ರಕಟಗೊಳ್ಳಲಿದ್ದು, ನ್ಯಾಯಾಲಯ ನೀಡುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ.
ಬೆಳಗ್ಗೆ 10.30ರಿಂದ 11ರೊಳಗೆ ತೀರ್ಪು ಪ್ರಕಟಗೊಳ್ಳಲಿದೆ. ಈಗಾಗಲೇ ಅನರ್ಹ ಶಾಸಕರಾದ ರಮೇಶ್ ಜಾರಕಿಹೋಳಿ, ಮುನಿರತ್ನ, ಎಸ್.ಟಿ ಸೋಮಶೇಖರ್, ಬಿಸಿ ಪಾಟೀಲ್, ಬೈರತಿ ಬಸವರಾಜ್, ಹೆಚ್. ವಿಶ್ವನಾಥ್, ರೋಷನ್ ಬೇಗ್, ಆರ್ ಶಂಕರ್ ಸೇರಿ ಇನ್ನು ಹಲವರು ದೆಹಲಿ ತಲುಪಿದ್ದು, ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ. ಇವರೆಲ್ಲರಿಗೂ ಡಿಸಿಎಂ ಅಶ್ವಥ್ ನಾರಾಯಣ ಸಾಥ್ ನೀಡಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಉಭಯ ಪಕ್ಷಗಳ 17 ಶಾಸಕರು ರಾಜೀನಾಮೆ ನೀಡುವ ಮೂಲಕ ಸರ್ಕಾರ ಪತನಕ್ಕೆ ಕಾರಣವಾಗಿದ್ದರು. ಶಾಸಕರು ನೀಡಿರುವ ರಾಜೀನಾಮೆ ಸಕಾರಣದಿಂದ ಕೂಡಿಲ್ಲ ಎಂಬ ಕಾರಣ ನೀಡಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಕುಮಾರ್ ಅವರು 17 ಶಾಸಕರನ್ನು ಅನರ್ಹಗೊಳಿಸಿ ಜುಲೈ 28ರಂದು ಮಹತ್ವದ ಆದೇಶ ಹೊರಡಿಸಿದ್ದರು. ಸ್ಪೀಕರ್ ಆದೇಶ ಪ್ರಶ್ನಿಸಿ ಎಲ್ಲ ಅನರ್ಹರು ಆಗಸ್ಟ್ 1ರಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದ್ದು, ಇಂದು ಪ್ರಕಟಿಸಲಿದೆ. ಹೀಗಾಗಿ ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.