‘ಇವತ್ತು ನಾನು ನನ್ನ ತಂದೆ ಹಾಗೂ ಹಿರಿಯರಿಗೆ ಪೂಜೆ ಮಾಡಬೇಕಿತ್ತು’ ಡಿ.ಕೆ ಶಿವಕುಮಾರ್ ಕಣ್ಣೀರು
ಹಬ್ಬದ ದಿನವೇ ಮಾಜಿ ಸಚಿವ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದಾರೆ. ಹೌದು.. ಮೂರನೇ ದಿನವಾದ ಇಂದು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವ ಮುನ್ನ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕಣ್ಣೀರು ಹಾಕಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಕಣ್ಣಲ್ಲಿ ನೀರು ಹಾಕುತ್ತಿರೋದು ನಮ್ಮ ತಂದೆಗೆ ಪೂಜೆ ಮಾಡುವ ಅವಕಾಶವನ್ನು ನನ್ನ ಬಿಜೆಪಿ ಸ್ನೇಹಿತರು ಅಧಿಕಾರದ ಮುಖಾಂತರ ಕೊಟ್ಟಿಲ್ಲ. ನನಗೆ ದುಃಖ ಯಾಕೆ ಆಗುತ್ತಿದೆ ಎಂದರೆ ಇವತ್ತು ತಂದೆ ಹಾಗೂ ಹಿರಿಯರಿಗೆ ನಾನು, ನನ್ನ ತಮ್ಮ ಪೂಜೆ ಮಾಡಬೇಕಿತ್ತು. ಆದರೆ ಅವರಿಗೆ ಎಡೆ ಇಡಲು ಕೂಡ ಇವರು ನನಗೆ ಕೊಟ್ಟಿಲ್ಲ. ಪರವಾಗಿಲ್ಲ, ಇಡಿ ಕಚೇರಿಯಲ್ಲೇ ಎಲ್ಲರನ್ನೂ ಸ್ಮರಿಸಿಕೊಳ್ಳುತ್ತೇನೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾರ್ಥಿಸುತ್ತೇನೆ ಎಂದು ಡಿಕೆಶಿ ಕಣ್ಣೀರಿಟ್ಟಿದ್ದಾರೆ.ಉಪ್ಪು ತಿಂದವರು ನೀರು ಕುಡಿಬೇಕು ಎಂದು ನನ್ನ ಸ್ನೇಹಿತರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೋಸ್ಕರ, ನಮ್ಮ ನಾಯಕರಿಗೋಸ್ಕರ, ನನ್ನನ್ನು ನಂಬಿದ ಜನಕ್ಕೋಸ್ಕರ ಹೋರಾಟ ಮಾಡಿಕೊಂಡು ನಾನು ಬಂದಿದ್ದೇನೆ. ಇಂದು ನಮ್ಮ ಅನೇಕ ಸ್ನೇಹಿತರು, ಕಾರ್ಯಕರ್ತರು, ನಾಯಕರು ಪಕ್ಷ ಬೆಳೆಸಿರುವುದರಿಂದ ಇಲ್ಲಿಯವರೆಗೆ ಬಂದಿದ್ದೇನೆ. ಇದನ್ನೆಲ್ಲಾ ಎದುರಿಸುವಂತಹ ಶಕ್ತಿ ದೇವರು ನನಗೆ ಕೊಟ್ಟಿದ್ದಾನೆ. ನಾನು ಯಾರಿಗೂ ಮೋಸ ಮಾಡಿಲ್ಲ, ಕಳ್ಳತನ ಮಾಡಿಲ್ಲ, ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ, ಲಂಚದ ಆರೋಪವಿಲ್ಲ, ಅಧಿಕಾರ, ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿಲ್ಲ. ನೇರವಾಗಿ ನುಡಿದಂತೆ ನಡೆದಿದ್ದೇನೆ.