ಎನ್ ಆರ್ ಸಿ, ಸಿಎಎ ವಿರೋಧಿಸಿ ಮಡಿಕೇರಿ, ಕನಕಪುರ, ಮೈಸೂರಿನಲ್ಲಿ ಪ್ರತಿಭಟನೆ…
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆ ಮಾಡಲಾಗುತ್ತಿದ್ದು, ರಾಜ್ಯದಲ್ಲೂ ಎನ್ ಆರ್ ಸಿ, ಸಿಎಎ ವಿರೋಧದ ಕಿಚ್ಚು ಇನ್ನೂ ಆರಿಲ್ಲ. ರಾಜ್ಯದ ಕೆಲವು ಜಿಲ್ಲೆಯಲ್ಲಿ ಇಂದೂ ಪ್ರತಿಭಟನೆ ಕೈಗೊಳ್ಳಲಾಗಿದೆ.
ಮಡಿಕೇರಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಎನ್ ಆರ್ ಸಿ, ಸಿಎಎ ವಿರೋಧಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಎನ್ಆರ್ಸಿ ಸಿಎಎ ವಾಪಸ್ಸು ಪಡೆಯುವಂತೆ ಆಗ್ರಹಿಸಿ, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ ವಿದ್ಯಾರ್ಥಿಗಳು.
ಇನ್ನೂ ರಾಮನಗರ ಜಿಲ್ಲೆ ಕನಕಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಮಿನಿವಿಧಾನಸೌಧದ ಆವರಣದಲ್ಲಿ ಸಾವಿರಾರು ಜನ ಮುಸ್ಲಿಂಮರು ಜಮಾವಣೆಯಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ ಭಾವಚಿತ್ರವಿಡಿದು CAA, NRC ವಿರೋಧಿಸಿ ಹೋರಾಟ ಮಾಡುತ್ತಿದ್ದಾರೆ.
ಇತ್ತ ಪೌರತ್ವ ಕಾಯ್ದೆ ವಿರೋಧಿಸಿ ಮೈಸೂರಿನ ಡಿಸಿ ಕಚೇರಿ ಬಳಿ ಜೆಡಿಎಸ್ ಪ್ರತಿಭಟನೆ ಕೈಗೊಂಡಿದೆ. ಮಾಜಿ ಸಚಿವ ಸಾರಾ ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನೆಯಲ್ಲಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್, ಪಾಲಿಕೆ ಸದಸ್ಯರು ಸೇರಿ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಪ್ರಧಾನ ಮಂತ್ರಿ ಹಾಗೂ ಅಮಿತ್ ಶಾ , ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯೊಂದಿಗೆ ಇದು ಜನ ವಿರೋಧಿ ನಿರ್ಧಾರ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಯ್ದೆ ವಾಪಸ್ ಪಡೆಯುವಂತೆ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.