ಚಿದಂಬರಂ ಕೇಸ್ ದಾಖಲೆಗಳನ್ನು ಡಿಕೆಶಿ ಪ್ರಕರಣಕ್ಕೂ ಕಟ್ ಆಂಡ್ ಪೇಸ್ಟ್ : ಇಡಿ ವಿರುದ್ಧ ಸುಪ್ರೀಂ ಗರಂ
ಚಿದಂಬರಂ ಕೇಸ್ ದಾಖಲೆಗಳನ್ನು ಕಟ್ ಆಂಡ್ ಪೇಸ್ಟ್ ಮಾಡಿದ ಇಡಿ ಪರವಾದ ವಕೀಲರ ವಿರುದ್ಧ ಸುಪ್ರಿಂ ಕೋರ್ಟ್ ಗರಂ ಆಗಿದ್ದು, ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದೆ.
ಹೌದು.. ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಇಡಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಆರ್.ಎಫ್ ನಾರಿಮನ್ ಹಾಗೂ ಎಸ್.ರವೀಂದ್ರ ಭಟ್ ಅವರ ಪೀಠ, ಇಡಿ ಪರ ವಕೀಲರನ್ನು ತರಾಟೆಗೆ ತೆಗದುಕೊಂಡರು. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪ್ರಕರಣದ ವಾದವನ್ನೇ ಸ್ವಲ್ಪವೂ ಬದಲಾವಣೆ ಮಾಡದೇ ಯಥಾವತ್ತಾಗಿ ಇಲ್ಲಿ ನೀಡಿದ್ದೀರಿ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.
ನ್ಯಾಯಾಲಯ ಈ ಆದೇಶ ಕಾನೂನು ಹೋರಾಟದಲ್ಲಿ ಡಿಕೆ ಶಿವಕುಮಾರ್ ಅವರಿಗೆ ದೊಡ್ಡ ಜಯವಾಗಿದೆ.
ಇದೇ ವೇಳೆ ಆದಾಯ ತೆರಿಗೆ ಇಲಾಖೆ ತಮ್ಮ ಮೇಲೆ ಮಾಡಿರುವ ಆರೋಪಗಳನ್ನು ವಜಾಗೊಳಿಸಬೇಕು ಎಂದು ಕೋರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿದೆ.