ರಾಜ್ಯದಲ್ಲಿ ಮಳೆ ಅಬ್ಬರ: 13 ಸಾವು; ಮಲೆನಾಡಿನ 07 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಕರ್ನಾಟಕದಲ್ಲಿ ಸುರಿಯುತ್ತಿರುವ ಅಬ್ಬರ ದ ಮಳೆಯಿಂದ ಇದುವರೆಗೂ 13 ಜನರು ಸಾವನ್ನಪ್ಪಿದ್ದಾರೆ.  ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ  ಆ. 13ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಿಸಿದೆ. ಹೆಚ್ಚು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಮಂಗಳೂರು, ಕಾರವಾರ ಸಮುದ್ರದಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದ್ದು, ಅಕ್ಕಪಕ್ಕದ ಗ್ರಾಮಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.  ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದ ಕೆ.ಆರ್​.ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ, ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್​ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ.

ಕೆಆರ್‌ಎಸ್‌ ಡ್ಯಾಂನಿಂದ ಹೊರಹರಿವು

ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್​ಎಸ್​, ಹಾರಂಗಿ, ಹೇಮಾವತಿ, ಕಬಿನಿ, ಆಲಮಟ್ಟಿ, ನಾರಾಯಣಪುರ ಡ್ಯಾಂಗಳು ಬಹುತೇಕ ಭರ್ತಿಯಾಗಿವೆ. ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಇದರಿಂದ ಉತ್ತರ ಒಳನಾಡು ಪ್ರದೇಶದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಚಿಕ್ಕಮಗಳೂರಿನಲ್ಲಿ ಚಾರ್ಮಾಡಿ ಘಾಟ್​ ಬಂದ್ ಆಗಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ತುಂಗಾ, ಭದ್ರಾ ನದಿಗಳು ಉಕ್ಕಿ ಹರಿಯುತ್ತಿವೆ. ಹಾಗಾಗಿ ತುಂಗಾಭದ್ರಾ ಜಲಾಶಯವೂ ಭರ್ತಿಯಾಗುವು ಸಾಧ್ಯತೆಯಿದೆ.

ಕರ್ನಾಟಕದಲ್ಲಿ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. 28 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,140 ಮನೆಗಳು ಬಹುತೇಕ ಹಾನಿಗೊಳಗಾಗಿವೆ. ರಾಜ್ಯದ 31,541 ಹೆಕ್ಟೇರ್ ಬೆಳೆ ಮತ್ತು 35,000 ತೋಟಗಾರಕಾ ಬೆಳೆಗಳು ಮಳೆಯಿಂದ ನಾಶವಾಗಿದೆ.

ಪ್ರವಾಹ ಪರಿಹಾರಕ್ಕಾಗಿ ರಾಜ್ಯ ಸರ್ಕಾರ 50 ಕೋಟಿ ಬಿಡುಗಡೆ ಮಾಡಿದ್ದು, ಹಾನಿಗೊಳಗಾದ ಕುಟುಂಬಕ್ಕೆ ಸ್ಥಳದಲ್ಲೇ 10,000 ನೀಡಲು ಅದೇಶಿಲಾಗಿದೆ.


ಇದನ್ನೂ ಓದಿಮಹಾರಾಷ್ಟ್ರ ಮಳೆಗೆ ಉಕ್ಕಿ ಹರಿಯುತ್ತಿವೆ ಉತ್ತರ ಕರ್ನಾಟಕ ನದಿಗಳು..

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights