ಸಾರಿಗೆ ನೌಕರರ ಮುಷ್ಕರ : ನಾನಾ ಜಿಲ್ಲೆಗಳಿಂದ ಪ್ರತಿಭಟನೆಗೆ ಬೆಂಬಲ
ವಿವಿಧ ಬೇಡಿಕೆಗಳು ಹಾಗೂ ತಮ್ಮನ್ನ ಸರ್ಕಾರಿ ನೌಕರರನ್ನಾಗಿಸಿ ಪರಿಗಣಿಸಲು ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ತಕ್ಕ ಮಟ್ಟಿಗೆ ಬೆಂಬಲ ದೊರತಿದೆ. ಆದರೆ ಸಾರಿಗೆ ಇಲಾಖೆ ಸಿಬ್ಬಂದಿಗೆ ನೋಟಿಸ್ ನೀಡಿದ್ದು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದೆ. ವಾರದ ರಜೆ ಪಡೆದವರು, ಅಥವಾ ಮೊದಲೇ ಅನುಮತಿ ಪಡೆದು ರಜೆ ಪಡೆದಿದ್ದವರು ಮಾತ್ರ ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಗದಗ, ಬೀದರ್ ಜಿಲ್ಲೆಗಳಿಂದ ಪ್ರತಿಭಟನೆಗೆ ನಿರ್ವಾಹಕರು ಮತ್ತು ಚಾಲಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಇನ್ನು ಶಿರಸಿ ವಿಭಾಗದಿಂದ 200ಕ್ಕೂ ಹೆಚ್ಚು ಸಾರಿಗೆ ನೌಕರರು ಬೆಂಗಳೂರು ತಲುಪಿದ್ದಾರೆ.ವಾರದ ರಜೆ ಪಡೆದವರು ಮಾತ್ರ ಬೆಂಗಳೂರಿಗೆ ಹೋಗಬಹುದು. ಗ್ರಾಮೀಣ ಭಾಗ ಸೇರಿದಂತೆ ಜಿಲ್ಲೆಯಲ್ಲಿ ಬಸ್ ಸಂಚಾರ ಎಂದಿನಂತೆ ನಡೆದಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹಾಸನ ಮೇನೇಜರ್ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
ಈ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ದೊರೆತಿಲ್ಲ. ಯಾವುದೇ ಬಸ್ ಸಂಚಾರ ಬಂದ್ ಇಲ್ಲದ ಹಾಗೆ ಕಾರ್ಯ ನಿರ್ವಹಿಸುತ್ತಿವೆ. ಬಾಗಲಕೋಟೆ, ಬಳ್ಳಾರಿ, ಗದಗ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉತ್ತರಕನ್ನಡ, ಬೀದರ್, ಕೊಡಗು, ರಾಯಚೂರು, ಹಾಸನ, ಮಂಡ್ಯ, ರಾಮನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಬಸ್ ಸಂಚಾರ ಆರಂಭವಾಗಿದೆ.