ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ಸಿಗರು ಗರಂ : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮುನಿಸು
ಉಪಚುನಾಚಣೆ ದಿನಾಂಕ ನಿಗಧಿಯಾಗುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಅಭ್ಯಾರ್ಥಿ ಆಯ್ಕೆ ವಿಚಾರದಲ್ಲಿ ಒಳಮನಸ್ತಾಪಗಳು ಹೆಚ್ಚಾಗುತ್ತಿವೆ. ಅದಕ್ಕೆ ಸಾಕ್ಷಿ ಎಂಬಂದತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮೂಲ ಕಾಂಗ್ರೆಸ್ಸಿಗರು ಮುನಿಸಿಕೊಂಡಿದ್ದಾರೆ.
ಹೌದು.. ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ಸಿಗರು ಗರಂ ಆಗಿದ್ದಾರೆ. ಯಾರಿಗೆ ಯಾವ ಜವಾಬ್ದಾರಿ ನೀಡಬೇಕೆಂದು ಚರ್ಚಿಸಲು ತಮ್ಮನ್ನು ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ಹಿನ್ನಲೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಭಾರಿ ಗದ್ದಲ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಹಿರಿಯರನ್ನು ಕಡೆಗಣಿಸಿ ಮೀಟಿಂಗ್ ಮಾಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ತಮ್ಮನ್ನು ಪರಿಗಣಿಸುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಕಳೆದ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆಯನ್ನು ನಾಯಕತ್ವ ವಹಿಸಿಕೊಂಡಿದ್ದವರು ಹೊತ್ತುಕೊಂಡಿಲ್ಲ. ರಾಷ್ಟ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೇ ಸೋಲಿನ ಹೊಣೆ ಹೊತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಮುಂಚೂಣಿ ನಾಯಕರು ಸೋಲಿನ ಹೊಣೆ ಹೊತ್ತಿಲ್ಲ. ಈಗ ತಮ್ಮನ್ನು ಕಡೆಗಣಿಸಿ ಉಪ ಚುನಾವಣೆ ತಯಾರಿ ನಡೆಸಲಾಗಿದೆ ಎಂದು ದೂರಿದ್ದಾರೆ ಎನ್ನಲಾಗಿದೆ.
ಕೆ.ಹೆಚ್. ಮುನಿಯಪ್ಪ ಮತ್ತು ಬಿ.ಕೆ. ಹರಿಪ್ರಸಾದ್ ಸೇರಿ ಹಲವರು ಸಿದ್ಧರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷದ ನಾಯಕರ ಸಭೆ ನಡೆದಿದ್ದು ಈ ವೇಳೆ ಸಿದ್ದರಾಮಯ್ಯ ಅವರ ಮೇಲೆ ಮೂಲ ಕಾಂಗ್ರೆಸ್ಸಿಗರು ಹರಿಹಾಯ್ದಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಸಭೆ ನಡೆಸಲಾಗಿದೆ ಈ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ. ಈಗಲೂ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಸರ್ವಾಧಿಕಾರಿ ಧೋರಣೆ ಸರಿಯಲ್ಲ ಎಂದು ಮೂಲ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.