CAA protest : ಪೌರತ್ವ ತಿದ್ದುಪಡಿ ವಿರುದ್ಧ ಮಂಗಳೂರುನಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿ..
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರ ಶೂಟೌಟ್ನಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಮಂಗಳೂರು ಕದ್ರಿ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ನಗರ ಪೊಲೀಸ್ ಆಯುಕ್ತ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಮುಖಂಡರು ಈ ವಿಷಯವನ್ನು ಬಹಿರಂಗಪಡಿಸಿದರು.
ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹಲವೆಡೆ ಪೊಲೀಸರು ಕರ್ಫ್ಯೂ ಹೇರಿದ್ದಾರೆ. ಪರಿಸ್ಥಿತಿ ಕೈಮೀರದಂತೆ ನೋಡಿಕೊಲ್ಲಲು ಮಂಗಳೂರಿನ ಆರು ಠಾಣಾ ವ್ಯಾಪ್ತಿಯಲ್ಲಿ ಈ ಕರ್ಫ್ಯೂ ಜಾರಿಗೆ ಬಂದಿದೆ.
ಲಾಠಿ ಪ್ರಯೋಗ ಮತ್ತು ಅಶ್ರುವಾಯು ಸಿಡಿಸಿದರೂ ಪ್ರತಿಭಟನೆ ಅಂಕೆಗೆ ಬರದ ಕಾರಣ ಮಂಗಳೂರು ಸೆಂಟ್ರಲ್ ವಿಭಾಗದ ಪ್ರದೇಶಗಳಲ್ಲಿ ಅನಿವಾರ್ಯವಾಗಿ ಶುಕ್ರವಾರ ರಾತ್ರಿವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.
ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ನಿಷೇಧಾಜ್ಞೆಯ ನಡುವೆಯೂ ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ಮಾಡಲು ಮುಂದಾದ ಗುಂಪನ್ನು ಚದುರಿಸಲು ಮಂಗಳೂರು ಪೊಲೀಸರು ಲಾಠಿ ಪ್ರಯೋಗ ಮಾಡಬೇಕಾಗಿ ಬಂದಿತ್ತು.
ನಿಷೇಧಾಜ್ಞೆಯನ್ನು ಉಲ್ಲಂಘಿಸಿ ದೊಡ್ಡ ಗುಂಪು ಕಟ್ಟಿಕೊಂಡು ಪ್ರತಿಭಟನೆ ನಡೆಸಲು ಪ್ರಯತ್ನಿಸಿದಾಗ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಬೇಕಾಗಿ ಬಂತು. ಇದೇ ವೇಳೆ ಪ್ರತಿಭಟನಾ ನಿರತರು ಪೊಲೀಸರ ಮೇಲೆ ಕಲ್ಲು ತೂರಾಟವನ್ನು ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಜನ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದಾಗ ಅವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಯೋಗಕ್ಕೆ ಶರಣಾದರು. ಈ ಸಂದರ್ಭದಲ್ಲಿ ಪೊಲಿಸರ ಮೇಲೆಯೂ ಕಲ್ಲು ತೂರಾಟ ಮಾಡಲಾಯಿತು. ಪ್ರತಿಭಟನೆಯ ಕಾವು ತಗ್ಗದ ಕಾರಣ ನಂತರ ಆಶ್ರುವಾಯು ಮತ್ತು ಗಾಳಿಯಲ್ಲಿ ಗುಂಡು ಹಾರಿಸಲಾಯಿತ.