ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು!
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿ ದಾಖಲಾಗಿದೆ. ಗುಣಮುಖರಾದವರ ಸಂಖ್ಯೆಯು ಲಕ್ಷದತ್ತ ಸಾಗುತ್ತಿದ್ದು ಬೆಂಗಳೂರು ನಗರದಲ್ಲು ಸೋಂಕಿನಿಂದ ಮುಕ್ತಿಪಡೆದವರ ಸಂಖ್ಯೆ ಹೆಚ್ಚುತ್ತಿರುವುದು ಕಂಡುಬರುತ್ತಿದೆ..
ಭಾನುವಾರ 5985 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾದರೇ, 4670 ಮಂದಿಯಲ್ಲಿ ಸೋಂಕು ಕಳೆದಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1998 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡರೇ 1837 ಮಂದಿ ಚೇತರಿಸಿಕೊಂಡಿದ್ದಾರೆ.
ಈವರೆಗೆ ರಾಜ್ಯದಲ್ಲಿ ಬಿಡುಗಡೆ ಹೊಂದಿದವರ ಸಂಖ್ಯೆ 93,908 ಆಗಿದ್ದರೇ, 80,973 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ. ಇದೇ ವೇಳೆ ಬೆಂಗಳೂರಿನ ರಾಜಾಜಿನಗರದ ಇ.ಎಸ್.ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಮರಣ ಪ್ರಮಾಣ ಹೆಚ್ಚಳವಾಗಿದ್ದು, ಇದಕ್ಕೆ ಕಾರಣ ತಿಳಿಯಲು ಸಮಿತಿ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಇಎಸ್ಐ ಆಸ್ಪತ್ರೆಯಲ್ಲಿ ಈವರೆಗೆ 421 ಕೊರೊನಾ ರೋಗಿಗಳು ದಾಖಲಾಗಿದ್ದಾರೆ. ಈವರೆಗೆ 54 ಕೊರೊನಾ ರೋಗಿಗಳು ಮೃತಪಟ್ಟಿದ್ದು, ಮರಣ ಪ್ರಮಾಣ ಶೇ.12.8 ರಷ್ಟಿದೆ ಎಂದು ವೈದ್ಯಾಧಿಕಾರಿಗಳು ಸಚಿವರಿಗೆ ವಿವರಿಸಿದರು.
ಈ ರೀತಿ ಮರಣ ಹೆಚ್ಚಳವಾಗಲು ಕಾರಣ ಪತ್ತೆ ಮಾಡಬೇಕು. ಇದಕ್ಕಾಗಿ ಸಮಿತಿಯೊಂದನ್ನು ರಚಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.ಕ್ಯಾನ್ಸರ್ ಇರುವ ರೋಗಿಗಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ಇನ್ನೂ ಹಲವು ರೋಗಿಗಳು ತಡವಾಗಿ ಬಂದು ದಾಖಲಾಗಿದ್ದಾರೆ. ಹೀಗಾಗಿ ಮರಣ ಪ್ರಮಾಣ ಹೆಚ್ಚಿದೆ. ಮರಣಕ್ಕೆ ಸಂಬಂಧಿಸಿದಂತೆ ಆಡಿಟ್ ವರದಿ ರೂಪಿಸಲು ಆದೇಶಿಸಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ವೈದ್ಯಾಧಿಕಾರಿಗಳು ಹೇಳಿದರು.
ಇದನ್ನೂ ಓದಿ: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್; ಭಾರತದಲ್ಲೇ ನಡೆಯಲಿದೆ ಐಸಿಸಿ ಟಿ20 ವಿಶ್ವಕಪ್!