ಉತ್ತರ ಪ್ರದೇಶದಲ್ಲಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್ಡೌನ್ ಘೋಷಿಸಿದ ಯೋಗಿ ಸರ್ಕಾರ!
ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದಕ್ಕಾಗಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಉತ್ತರ ಪ್ರದೇಶ ರಾಜ್ಯಾದ್ಯಂತ ಶನಿವಾರ ಹಾಗೂ ಭಾನುವಾರ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದೆ.
ಮುಂದಿನ ಶನಿವಾರದಿಂದ ವಾರಾಂತ್ಯ ಲಾಕ್ ಡೌನ್ ಜಾರಿಗೆ ಬರಲಿದ್ದು, ಈ ಅವಧಿಯಲ್ಲಿ ಮಾರುಕಟ್ಟೆ ಹಾಗೂ ಕಚೇರಿಗಳು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಉತ್ತರ ಪ್ರದೇಶ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಅವರು ಹೇಳಿದ್ದಾರೆ.
ಅನಗತ್ಯ ಓಡಾಟದಿಂದ ಕೊರೋನಾ ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ವಾರಾಂತ್ಯ ಲಾಕ್ ಡೌನ್ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೂ ಈ ವಾರಾಂತ್ಯ ಲಾಕ್ ಡೌನ್ ಅನ್ವಯವಾಗಲಿದೆ ಎಂದು ಅವಸ್ಥಿ ಅವರು ಹೇಳಿದ್ದಾರೆ.