ಚೀನಾದೊಂದಿಗೆ ಮಾತುಕತೆ ಸಾಧ್ಯವಾದ ಮೇಲೆ, ಪಾಕ್ ಜೊತೆ ಯಾಕಿಲ್ಲ? ಫಾರೂಕ್ ಅಬ್ದುಲ್ಲಾ
ಲಡಾಕ್ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ, ಬಿಕ್ಕಟ್ಟು ಶಮನಗೊಳಿಸಲು ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ನಡೆಸುವುದು ಸಾದ್ಯವಾಗುತ್ತದೆ ಎನ್ನುವುದಾದರೆ, ಪಾಕಿಸ್ತಾನದೊಂದಿಗೆ ಏಕೆ ಸಾಧ್ಯವಾಗುವುದಿಲ್ಲ ಎಂದು ಸಂಸದ ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
ಲಡಾಖ್ ಗಡಿಯಲ್ಲಿ ಉದ್ಭವವಾಗಿರುವ ಗಡಿ ತಕರಾರನ್ನು ಬಗೆಹರಿಸಲು ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿವೆ. ಆದರೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿನ ಸಮಸ್ಯೆಗಳನ್ನೂ ಬಗೆಹರಿಸಲು ಭಾರತ=ಪಾಕ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಲೋಕಸಭೆಯಲ್ಲಿ ಆಗ್ರಹಿಸಿದರು.
ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ನಿರಂತರ ಕಾದಾಟದಿಂದ ಜನಸಾಮಾನ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಜೀವ ಉಳಿಸಲು ಪಾಕ್ ಕದನ ವಿರಾಮ ಉಲ್ಲಂಘನೆಯನ್ನು ನಿಲ್ಲಿಸಬೇಕಿದೆ. ಅದು ರಾಜತಾಂತ್ರಿಕ ಮಾತುಕತೆಗಳಿಂದ ಮಾತ್ರ ಇದು ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.
ಆದರೆ, ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದು, ಅದನ್ನು ನಿಲ್ಲಿಸುವವರೆಗೂ ಪಾಕ್ ಜೊತೆಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಈ ಹಿಂದೆ ಹೇಳಿತ್ತು.
ಜಮ್ಮು ಮತ್ತು ಕಾಶ್ಮೀರದ ಪ್ರಾದೇಶಿಕ ಪಕ್ಷವಾಗಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಮತ್ತು ಸಂಸದರಾಗಿರುವ ಫಾರುಕ್ ಅಬ್ದುಲ್ಲಾ ಅವರನ್ನು ಕೇಂದ್ರ ಸರ್ಕಾರ ಕಳೆದ ವರ್ಷ ಜ&ಕಾ ಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370ಯನ್ನು ರದ್ದುಗೊಳಿಸಿದ ನಂತರ ಗೃಹ ಬಂಧನದಲ್ಲಿ ಇಡಲಾಗಿತ್ತು.
ಕಳೆದ ಕೆಲವು ದಿನಗಳ ಹಿಂದೆ ಅವರನ್ನು ಗೃಹ ಬಂಧನದಿಂದ ಮುಕ್ತಗೊಳಿಸಲಾಗಿದ್ದು, ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.