ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಂಘಟನೆಗಳ ಐಕ್ಯ ಹೋರಾಟ: ಬೆಂಗಳೂರಿನಲ್ಲಿ ಜನತಾ ಅಧಿವೇಶನ
ರಾಜ್ಯದ ಮುಂಗಾರು ಅಧಿವೇಶನ ನಾಳೆ (ಸೆ.21)ಯಿಂದ ಆರಂಭವಾಗಲಿದೆ. ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ.
ಜನವಿರೋಧಿ ನೀತಿಗಳನ್ನು ಜಾರಿಮಾಡಲು ನಡೆಯುತ್ತಿರುವ ಅಧಿವೇಶನವನ್ನು ವಿರೋಧಿಸಿ, ಜನಪರ ಚಿಂತನೆಯ ಚರ್ಚೆನಡೆಲು ಹಾಗೂ ರೈತ ವಿರೋಧಿ ಸುಗ್ರೀವಾಜ್ಞೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಚಳುವಳಿಗಳ ಪರ್ಯಾಯ ಜತನಾ ಅಧಿವೇಶನವನ್ನು ನಡೆಸಲು ಸಂಘಟನೆಗಳು ಮುಂದಾಗಿವೆ.
ಕೊರೊನಾ ಲಾಕ್ಡೌನ್ ಸಂದರ್ಭವನ್ನು ಬಳಿಕೊಂಡು ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಮತ್ತು ಭೂಸುಧಾರಣ ಕಾಯ್ದೆಗಳ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪರ್ಕ್ನಲ್ಲಿ ಬೃಹತ್ ಪ್ರತಿಭಟನೆಯನ್ನು ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ರಂಗ ನಡೆಸಲಿದೆ.
ರೈತರನ್ನು ಖಾಸಗೀ ಮಾರುಕಟ್ಟೆದಾರರ ಮುಂದೆ ಮಂಡಿಯೂರುವಂತೆ ಮಾಡಲಿರುವ ಎಪಿಎಂಪಿ ಕಾಯ್ದೆ ತಿದ್ದುಪಡಿ ಮತ್ತು ಬಡವರ, ರೈತರ ಭೂಮಿಯನ್ನು ಕಸಿದುಕೊಂಡು ಕಾರ್ಪೋರೇಟ್ ಕೂಳರಿಗೆ ಅನುಕೂಲ ಮಾಡಿಕೊಡುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕು. ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಉ ಮುಂದಾಗಿರುವ ಸರ್ಕಾರ, ಈ ವಿಚಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಸೋಮವಾರ ಹೋರಾಟ ನಡೆಯಲಿದೆ.
ರೈತ, ದಲಿತ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ಸೋಮವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಫ್ರೀಡಂ ಪಾರ್ಕ್ನಲ್ಲಿ ಚಳುವಳಿಗಳ ಪರ್ಯಾಯ ಜನತಾ ಅಧಿವೇಶನ ನಡೆಯಲಿದೆ ಎಂದು ತಿಳಿದು ಬಂದಿದೆ.
ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟದಲ್ಲಿ ಸ್ವರಾಜ್ ಇಂಡಿಯಾ ಸಂಘಟನೆಯ ಯೋಗೇಂದ್ರ ಯಾದವ್, ಸಾಹಿತಿ ದೇವನೂರು ಮಹಾದೇವ, ಜಸ್ಟೀಸ್ ಎಸ್.ಎನ್ ನಾಗಮೋಹನ್ ದಾಸ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ಸೇರಿದಂತೆ ರೈತ, ಕಾರ್ಮಿಕ, ದಲಿತ ಮುಖಂಡರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಉದ್ಯಮಿಗಳಿಗಾಗಿ ರೈತರ ಭೂಮಿ ಕಿತ್ತುಕೊಂಡು ಬೀದಿ ಪಾಲು ಮಾಡುತ್ತಿದೆ ಸರ್ಕಾರ: ಶಶಿಕಾಂತ್ ಸೆಂಥಿಲ್