ರಾಜ್ಯದಲ್ಲಿ ಮತ್ತೆ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ನಿಂದ ಸಮಿತಿ ರಚನೆ!
ರಾಜ್ಯದಲ್ಲಿ ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯತ್ತ ಚಿತ್ತ ಹರಿಸಿದೆ.
ಬಸವ ಕಲ್ಯಾಣ, ಮಸ್ಕಿ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಎರಡು ಸಮಿತಿಗಳನ್ನು ಕಾಂಗ್ರೆಸ್ ರಚಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮಾಜಿ ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಮಸ್ಕಿ ಹಾಗೂ ಬಸವಕಲ್ಯಾಣ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಹಾಗೂ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸಮಿತಿಯಲ್ಲಿ ಚರ್ಚೆ ನಡೆಸಿ ಅಭ್ಯರ್ಥಿ ಯಾರು ಎಂಬುವುದನ್ನು ಅಂತಿಮಗೊಳಿಸಲಾಗುತ್ತದೆ. ಜೊತೆಗೆ ನವೆಂಬರ್ 31ಕ್ಕೆ ಹಿರಿಯ ಕಾಂಗ್ರೆಸ್ ಮುಖಂಡರ ಸಭೆ ಕೂಡಾ ನಡೆಯಲಿದೆ. ಸಭೆಯಲ್ಲಿ ಯಾರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬಹುದು ಎಂಬ ಕುರಿತಾಗಿ ಚರ್ಚೆ ನಡೆಯಲಿದೆ ಎಂದಿದ್ದಾರೆ.
ಇನ್ನು ರಾಜ್ಯಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಾಗಿ ಸೋಮವಾರ ಸಂಜೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಮ್ಮಲ್ಲಿ ಸಂಖ್ಯೆಯ ಕೊರತೆ ಇದೆ. ಈ ಕಾರಣಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕಾ ಬೇಡವೋ ಎಂಬ ನಿರ್ಧಾರ ವರಿಷ್ಠರ ಜೊತೆಗೆ ಚರ್ಚಿಸಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಎಂದಿಗೂ ಪರಿಣಾಮಕಾರಿ ಪರ್ಯಾಯ ಪಕ್ಷವಾಗಿಲ್ಲ: ಕೈ ಮುಖಂಡ ಕಪಿಲ್ ಸಿಬಲ್