ಕುಮಾರಸ್ವಾಮಿ ಬೇನಾಮಿ ಆಸ್ತಿ ಹೊಂದಿದ್ದಾರೆ; ಅದರ ರಕ್ಷಣೆಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ: ಸಿದ್ದರಾಮಯ್ಯ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯ ಬಳಿ ಬೇನಾಮಿ ಜಮೀನಿದೆ. ಆ ಬೇನಾಮಿ ಆಸ್ತಿಯನ್ನು ಉಳಿಸಿಕೊಳ್ಳಲು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂಧು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಸ್ವತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕುಮಾರಸ್ವಾಮಿ ಹೊಂದಿರುವ ಬೇನಾಮಿ ಜಮೀನಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಜಾ ಮಾಡಿದೆ. ಅವರ ಸ್ವಾರ್ಥಕ್ಕಾಗಿ ನಾಚಿಕೆ ಇಲ್ಲದೆ, ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಯಡಿಯೂರಪ್ಪ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಮೂರು ಬಾರಿ ಹಸಿರು ಶಾಲು ಹಾಕಿ ಪ್ರಮಾಣವನ ಸ್ವೀಕಾರ ಮಾಡಿದ್ದಾರೆ. ಆದರೆ ಈಗ ರೈತರಿಗೆ ದ್ರೋಹ ಮಾಡುತ್ತಿದ್ದಾರೆ. ಎಪಿಎಂಸಿ ಕಾರ್ಪೊರೇಟ್ ಕಂಪನಿಯ ಪರವಾಗಿರುವ ಮಸೂದೆಯಾಗಿದೆ. ಇದನ್ನು ರಾಜ್ಯದ ಮೇಲೆ ಕೇಂದ್ರ ಸರ್ಕಾರ ಹೇರಿದೆ. ಅವರ ಉದ್ದೇಶವೇ ಎಪಿಎಂಸಿಯನ್ನು ಮುಚ್ಚುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: BJP ಸರ್ಕಾರದ ಭೂಸುಧಾರಣಾ ಮಸೂದೆಗೆ JDS ಬೆಂಬಲ; ಪರಿಷತ್ನಲ್ಲಿ ಅಂಗೀಕಾರ!
ಈ ಕಾಯ್ದೆಗಳು ಜಾರಿಗೆ ಬಂದರೆ, ರೈತರು ಅಂಬಾನಿ, ಅಧಾನಿ ಮುಂದೆ ಕೈಕಟ್ಟಿ ನಿಲ್ಲಬೇಕಾಗುತ್ತದೆ. ರೈತರ ಸ್ವಾಭಿಮಾನವನ್ನು ಪಣಕ್ಕಿಡುವ, ರೈತರಿಗೆ ದ್ರೋಹ ಬಗೆಯುವ ಕಾಯ್ದೆ ಇದಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕಾಯ್ದೆಗಳನ್ನು ಕೈಬಿಡುತ್ತೇವೆ ಎಂದು ಅವರು ಹೇಳಿದ್ದಾರೆ.
ರೈತ ಮತ್ತು ಕಾರ್ಮಿಕ ವಿರೋಧಿಯಾಗಿರುವ ಎಪಿಎಂಸಿ, ಭೂ ಸುಧಾರಣೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಜಾರಿಗೆ ತಂದು ರೈತರ ಭೂಮಿಯನ್ನು ಮತ್ತು ಕಾರ್ಮಿಕರ ಶ್ರಮವನ್ನು ಅಂಬಾನಿ-ಅದಾನಿಗಳಿಗೆ ಮಾರಲು ಬಿಜೆಪಿ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ವಿಧಾನಸಭೆ ಕಲಾಪ ಬಹಿಷ್ಕರಿಸಿರುವ ವಿರೋಧ ಪಕ್ಷಗಳು; ಏಕಪಕ್ಷೀಯವಾಗಿ ನಡೆಯುತ್ತಿದೆ ಅಧಿವೇಶನ!