ನಟ ರಾಘವೇಂದ್ರ ರಾಜಕುಮಾರ್ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಗೆ ಭೇಟಿ ನೀಡಿದ ಪುನೀತ್..
ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ರಾಘವೇಂದ್ರ ರಾಜಕುಮಾರ್ ಅವರನ್ನು ಭೇಟಿ ಮಾಡಿದ ಪುನೀತ್ ರಾಜಕುಮಾರ್ ಯೋಗಕ್ಷೇಮ ವಿಚಾರಿಸಿದ್ದಾರೆ .ಇಂದು ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಕ್ಕೆ ಮಾತನಾಡಿದ ಅವರು, ರಾಘಣ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೇ ಅವರು ಇಂದು ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದಿದ್ದಾರೆ.
ನಿನ್ನೆ ರಾಘವೇಂದ್ರ ಅವರು ಬೆಳಕು ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಆದರೆ ಆರೋಗ್ಯದಲ್ಲಿ ಏರುಪೇರಾಗಿ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಅವರನ್ನು ಯಶವಂತಪುರದ ಕೊಲಂಬಿಯಾದ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿವರಾಜಕುಮಾರ್, ಪುನೀತ್ , ಶ್ರೀಮುರಳಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಶ್ರೀಮುರಳಿ, ಅಭಿಮಾನಿಗಳ ಆಶೀರ್ವಾದ ಇರುವವರೆಗೂ ರಾಘಣ್ಣನಿಗೆ ಏನೂ ಆಗುವುದಿಲ್ಲ ಎಂದು ಹೇಳಿದ್ದರು. ಇಂದಿನ ವರದಿ ಬಗ್ಗೆ ಮಾತನಾಡಿದ ಪುನೀತ್, ಅವರು ಚೇತರಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆಂದು ಪುನೀತ್ ಹಂಚಿಕೊಂಡಿದ್ದಾರೆ.
ಆಸ್ಪತ್ರೆ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಅಭಿಮಾನಿಗಳು ದೌಡಾಯಿಸಿದರೆ ಎದುರಾಗುವ ಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕೆ ಕ್ರಮವನ್ನು ವಹಿಸಲಾಗಿದೆ.