ಉಪ ಸಮರಕ್ಕೂ ಮುನ್ನ JDSಗೆ ಹಿನ್ನೆಡೆ; ಪಕ್ಷದ ಬೆಳಗಾವಿ ಮುಖಂಡ ಕಾಂಗ್ರೆಸ್ ಸೇರಲು ನಿರ್ಧಾರ!
ಮುಂದಿನ ತಿಂಗಳು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಡುವೆ, ಜೆಡಿಎಸ್ನ ಹಿರಿಯ ಮುಖಂಡ ಅಶೋಕ್ ಪೂಜಾರಿ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ನಿರ್ಧಾರಿಸಿದ್ದಾರೆ.
ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅಶೋಕ್ ಪೂಜಾರಿ, ಮುಂದಿನ ತಿಂಗಳು (ಏಪ್ರಿಲ್) 02 ರಂದು ಕಾಂಗ್ರೆಸ್ಗೆ ಸೇರುತ್ತೇನೆ ಎಂದು ಹೇಳಿದ್ದಾರೆ.
ನಾನು ನಾಲ್ಕು ಭಾರಿ ವಿಧಾನಸಭೆಗೆ ಸ್ಪರ್ಧೆ ಮಾಡಿದ್ದೇನೆ. ಇದೀಗ ಕಾಂಗ್ರೆಸ್ ಸೇರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಅಹ್ವಾನ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಗೋಕಾಕ ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಉದ್ದೇಶದಿಂದ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಉಪ ಸಮರದಿಂದ ಜೆಡಿಎಸ್ ಹಿಂದೆ ಸರಿದಿದೆ. ಈ ಸಂದರ್ಭದಲ್ಲಿಅಶೋಕ್ ಪೂಜಾರಿ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿರುವುದು ಈ ನಡೆ ನಾನಾ ರೀತಿಯ ಚರ್ಚೆಗೆ ಕಾರಣವಾಗಿದೆ.
ಏಪ್ರಿಲ್ 18ರಂದು ಉಪಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಬೆಳಗಾವಿಗೆ ಡಿಕೆ ಶಿವಕುಮಾರ್ ಎಂಟ್ರಿ : ಕಪ್ಪು ಬಾವುಟ ಪ್ರದರ್ಶಿಸಿ ಸಾಹುಕಾರನ ಬೆಂಬಲಿಗಿಂದ ಪ್ರತಿಭಟನೆ!