ದಲಿತ ಯುವಕನಿಗೆ ಮೂತ್ರ ಕುಡಿಸಿ ಪೊಲೀಸರ ದೌರ್ಜನ್ಯ; ಪಿಎಸ್ಐ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ!
ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನೊಬ್ಬನಿಗೆ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ಅವರನ್ನು ಬಂಧಿಸಬೇಕು. ಪ್ರಕರಣದ ಹೊಣೆಗಾರಿಕೆಗಾಗಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅವರನ್ನು ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲಿಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ರಾಜ್ಯ ಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಡಾ.ಸೈಯದ್ ನಾಸೀರ್ ಹುಸೇನ್ ಅವರು ದೂರು ನೀಡಿದ್ದು, ಮೂಡಿಗೆರೆ ತಾಲ್ಲೂಕಿನ ಕೆ.ಎಲ್.ಪುನೀತ್ ಎಂಬ ಯುವಕನಿಗೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಮನಸೋಯಿಚ್ಛೆ ಥಳಿಸಿದ್ದು, ಚಿತ್ರಹಿಂಸೆ ನೀಡಿ, ಬಾಯಾರಿಕೆ ಎಂದು ನೀರು ಕೇಳಿದಾಗ ಮೂತ್ರ ಕುಡಿಸಿ ದೌರ್ಜನ್ಯ ಎಸಗಿದ್ದಾರೆ. ಅಧಿಕಾರದ ದರ್ಪ ಮೆರೆದು ದೌರ್ಜನ್ಯ ಎಸಗಿರುವ ಪಿಎಸ್ಐ ಅರ್ಜುನ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆ ನಡೆದು 10 ದಿನ ಕಳೆದರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಖಂಡನೀಯ. ತಪ್ಪಿತಸ್ಥ ಅಧಿಕಾರಿಯ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ. ಕೂಡಲೇ ಸಬ್ ಇನ್ಸಪೆಕ್ಟರ್ ಅರ್ಜುನ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು. ಘಟನೆ ಬಗ್ಗೆ ಮಾಹಿತಿ ಇದ್ದರೂ ನಿರ್ಲಕ್ಷ ಮತ್ತು ಮೌನತಾಳಿರುವ ಚಿಕ್ಕಮಗಳೂರು ಎಸ್ಪಿ ಅವರನ್ನೂ ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವ ದೇವದಾಸಿ ಪದ್ಧತಿ..!
ಪಿಎಸ್ಐ ಅರ್ಜುನ್ ಅವರನ್ನು 10 ದಿನಗಳ ಕಾಲ ಅಮಾನತಿನಲ್ಲಿಟ್ಟು, ನಂತರ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಇದು ಸರ್ಕಾರದ ಬೇಜವಾಬ್ದಾರಿತನ. ಸರ್ಕಾರ ಕೂಡಲೇ ವರದಿ ಪಡೆದ ಪಿಎಸ್ಐ ಮತ್ತು ಆ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸ್ ಕಾನ್ಸ್ ಟೆಬಲ್ ಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಈ ಪ್ರಕರಣ ಮಾತ್ರವಲ್ಲದೆ, ಬಿಜಾಪುರ ಜಿಲ್ಲೆಯ ಇಬ್ಬರು ಸಹೋದರಿಯರ ಕೊಲೆಗೆ ಸಂಬಂಧಿಸಿದಂತೆಯೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಧೋರಣೆ ಹೊಂದಿದ್ದು, ತನಿಖೆಯನ್ನು ನಿಧಾನಗೊಳಿಸಿ ಬೇಜವಾಬ್ದಾರಿತನ ತೋರುತ್ತಿದೆ. ಕಾಟಾಚಾರಕ್ಕೆ ಇಬ್ಬರನ್ನು ಬಂಧಿಸಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಕೂಡಲೇ ಬಿಜಾಪುರ ಜಿಲ್ಲೆಯ ಸಹೋದರಿಯರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಕೂಡ ಕಾಂಗ್ರೆಸ್ ಒತ್ತಾಯಿಸಿದೆ.
ಇದನ್ನೂ ಓದಿ: ವಿಜಯಪುರ ದಲಿತ ಬಾಲಕಿಯರ ಅತ್ಯಾಚಾರ ಪ್ರಕರಣ; ಕುಂಟುತಿರುವ ತನಿಖೆ ವಿರುದ್ದ ಮಾದಾರ ಚೆನ್ನಯ್ಯ ಆಕ್ರೋಶ