ರಾಜ್ಯದಲ್ಲಿ ಮುಂಗಾರು ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಸಿಎಂ!

ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ಜರುಗಿತು. ಸಭೆಯಲ್ಲಿ 209 ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆಯಾಗುವುದರಿಂದ ಒಟ್ಟು 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಮುಂಗಾರಿನ ಪ್ರವೇಶವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ನಡೆದಿದೆ.

ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ.

ರಸ್ತೆ ಬದಿ ಮಳೆನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ.

ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ.

209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights