ಸಿಎಂ ಯಡಿಯೂರಪ್ಪ ಪದಚ್ಯುತಿ?; ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?
ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡುವುದೇ ಆದರೆ, ತಮಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಕೆಲವು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ವಿಜಯೇಂದ್ರ, ಈ ರೀತಿಯ ಬೇಡಿಕೆ ಇಟ್ಟಿದ್ದಾರೆ ಎಂಬ ಚರ್ಚೆ ದೆಹಲಿ ಮಟ್ಟದ ನಾಯಕರ ವಲಯದಲ್ಲಿ ಹರಿದಾಡುತ್ತಿದೆ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದ ವಿಜಯೇಂದ್ರ, ಈ ಬೇಡಿಕೆಯ ಜತೆಗೆ ಯತ್ನಾಳ ಹಾಗೂ ಯೋಗೇಶ್ವರ್ ಅವರನ್ನು ಉಚ್ಛಾಟಿಸಬೇಕು ಎಂದೂ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
‘ಭಿನ್ನಮತೀಯರಿಗೆ ಪಾಠ ಕಲಿಸುವ ಬಗ್ಗೆ ವರಿಷ್ಠರು ಭರವಸೆ ಕೊಟ್ಟಿದ್ದು, ಸದ್ಯದಲ್ಲೇ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಜರುಗಲಿದೆ ಎಂಬ ಸುದ್ದಿಯನ್ನು ಈ ಬೆಳವಣಿಗೆ ಬೆನ್ನಲ್ಲೇ ಹರಿಬಿಡಲಾಯಿತು.
ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರ ಕಣ್ಣಿಟ್ಟಿರುವ ಕಾರಣಕ್ಕೆ, ಈಗಿನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ದುರ್ಬಲ ಅಧ್ಯಕ್ಷ ಎಂದು ಬಿಂಬಿಸುವ ಯತ್ನವೂ ನಡೆಯುತ್ತಿದೆ’ ಎಂದೂ ಬಿಜೆಪಿ ಮೂಲಗಳು ಹೇಳುತ್ತಿವೆ.