ಗೋಹತ್ಯೆ ನಿಷೇಧ ಕಾಯ್ದೆ ವಿರುದ್ದ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ; ಪ್ರಮಾಣ ಪತ್ರ ಸಲ್ಲಿಸಿದ ಸರ್ಕಾರ!

ಗೋಹತ್ಯೆ ನಿಷೇಧವೇ ತಮ್ಮ ಪರಮ ಆಧ್ಯತೆ ಎಂದು ಬೊಬ್ಬಿರಿಯುತ್ತಿದ್ದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ, “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ. ಆದರೆ, ಕಾಯ್ದೆಯನ್ನು ಜಾರಿಗೆ ತರದಂತೆ ಹಲವರು ಹೈಕೋರ್ಟ್​ನಲ್ಲಿ ರಿಟ್​ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಕೈಗೆತ್ತಿಕೊಂಡಿದೆ. ಈ ಸಂಬಂಧ ಪ್ರಮಾಣ ಪತ್ರವನ್ನೂ ಸರ್ಕಾರ ಕೋರ್ಟ್​ಗೆ ಇಂದು ಸಲ್ಲಿಸಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಹೊರಡಿಸಿದ್ದ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಸಹ ಈ ಹಿಂದೆ ದಾಖಲಿಸಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಿ ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗುದಂ ಅವರನ್ನು ಒಳಗೊಂಡ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಹಾಗೆಯೇ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಿವೆ. ಹಾಗೆಯೇ ಈ ಸುಗ್ರೀವಾಜ್ಞೆಯು ವ್ಯಾಪಾರ ಮತ್ತು ವ್ಯವಹಾರದ ಹಕ್ಕನ್ನು ಉಲ್ಲಂಘಿಸಿವೆ ಎಂದು ಅರ್ಜಿದಾರ ಮೊಹಮ್ಮದ್ ಆರಿಫ್ ತಮ್ಮ ಹೈಕೋರ್ಟ್​ಗೆ ತಿಳಿಸಿದ್ದರು.

ದೇಶದಲ್ಲಿ ಪ್ರಾಣಿಗಳನ್ನು ವಧಿಸುವುದನ್ನು ನಿಷೇಧಿಸುವುದರಿಂದ ಮಾಂಸ ಮಾರಾಟಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗೆಯೇ ಈ ಕಾನೂನಿನಿಂದ ಅವರ ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದರೊಂದಿಗೆ ನಾಗರಿಕರು ತಮ್ಮ ಆಹಾರದ ಆಯ್ಕೆಯನ್ನು ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಈ ಕಾನೂನನನ್ನು ಪುನರ್ಪರಿಶೀಲಿಸಬೇಕೆಂದು ಅರ್ಜಿದಾರರು ವಾದಿಸಿದ್ದರು. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್ ನೀಡಿತ್ತು. ಅಲ್ಲದೆ, ಈ ಸಂಬಂಧ ವಿಸ್ಕೃತ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಹೀಗಾಗಿ ಇಂದು ಹೈಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ರಿಟ್ ಅರ್ಜಿಗೆ ಉತ್ತರ ನೀಡಿರುವ ರಾಜ್ಯ ಸರ್ಕಾರ, “ರಾಜ್ಯದಲ್ಲಿ ಗೋವುಗಳ ಸಂರಕ್ಷಣೆ ಅಗತ್ಯವಿದೆ. ಕೃಷಿ ಕಾರ್ಯಕ್ಕೆ ಗೋವುಗಳು ಅಗತ್ಯ. ರಾಜ್ಯದ ಒಟ್ಟಾರೆ ಆದಾಯದಲ್ಲಿ 52,688 ಕೋಟಿ ಕೃಷಿಯಲ್ಲಿ ಗೋವುಗಳ ಬಳಕೆಯಿಂದಲೇ ಬರುತ್ತಿದೆ. ಒಟ್ಟಾರೆ ಕೃಷಿ ಆದಾಯ 1,28,000 ಕೋಟಿ ಆಗಿದೆ. ಶೇ. 80 ರಷ್ಟು ರೈತರ ಬಳಿ 2 ಹೆಕ್ಟೇರ್‌ಗಿಂತಲೂ ಕಡಿಮೆ ಭೂಮಿ ಇದೆ. ಈ ರೈತರು ಕೃಷಿ ಚಟುವಟಿಕೆಗಳಿಗೆ ಗೋವುಗಳನ್ನೇ ಹೆಚ್ಚಾಗಿ ಅವಲಂಬಿಸಬೇಕು.

ಈ ಹಿನ್ನೆಲೆಯಲ್ಲಿ ಜಾನುವಾರುಗಳ ರಕ್ಷಣೆ ಅತ್ಯಗತ್ಯವಾಗಿತ್ತು. ಹೀಗಾಗಿ, ಸರ್ಕಾರ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020″ ಕಾಯ್ದೆಯನ್ನು ಜಾರಿಗೆ ತಂದಿದೆ” ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಈ ಬಗ್ಗೆ ರಾಜ್ಯ ಸರ್ಕಾರ ಮಾಧ್ಯಮ ಪ್ರಕಟಣೆಯನ್ನೂ ಹೊರಡಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಶೇ.7ಕ್ಕಿಂತ ಇಳಿಕೆ; 5 ಹಂತಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆ: ಸಚಿವ ಅಶೋಕ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights