2024ರ ಚುನಾವಣೆಗೆ ತಂತ್ರ: ಸೋನಿಯಾ ಗಾಂಧಿ ಸೇರಿದಂತೆ ವಿಪಕ್ಷ ನಾಯಕರ ಭೇಟಿಗೆ ಮಮತಾ ಸಜ್ಜು!
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 2024 ಲೋಕಸಭಾ ಚುನಾವಣೆಗೆ ಹೊಸ ತಂತ್ರ ಎಣೆಯಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ಅವರು ದೆಹಲಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರತಿಪಕ್ಷಗಳನ್ನು ಸಜ್ಜುಗೊಳಿಸುವಲ್ಲಿ ಮಮತಾ ಬ್ಯಾನರ್ಜಿಯವರ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದ್ದು, ನಾಲ್ಕು ದಿನಗಳ ಕಾಲ ದೆಹಲಿಗೆ ಭೇಟಿ ನೀಡಲಿರುವ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತುಇತರ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ. ಭೇಟಿಯ ದಿನಾಂಕಗಳನ್ನು ಇನ್ನು ನಿಗದಿಪಡಿಸಲಾಗಿಲ್ಲ.
ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್ ನ್ಯಾಯಾಧೀಶರು..!
“ಚುನಾವಣೆ ನಂತರ ನಾನು ದೆಹಲಿಗೆ ಹೋಗಿಲ್ಲ. ಈಗ ಕೋವಿಡ್ ಪರಿಸ್ಥಿತಿ ಉತ್ತಮವಾಗಿದೆ. ಸಂಸತ್ತಿನ ಸಮಯದಲ್ಲಿ ನಾನು ದೆಹಲಿಗೆ ತೆರಳುತ್ತೇನೆ, ನನ್ನ ಸ್ನೇಹಿತರನ್ನು ಭೇಟಿಯಾಗುತ್ತೇನೆ. ನನಗೆ ಸಮಯ ನೀಡಿದರೆ, ನಾನು ಪ್ರಧಾನಿ ಮತ್ತು ಅಧ್ಯಕ್ಷರನ್ನು ಭೇಟಿ ಮಾಡಬಹುದು” ಎಂದು ಬಂಗಾಳದ ಮುಖ್ಯಮಂತ್ರಿ ಗುರುವಾರ ಮಧ್ಯಾಹ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ಬಾರಿ ಭೇಟಿಯಾಗಿದ್ದಾರೆ. ಆದರೆ, ಚುನಾವಣಾ ಮಾತುಕತೆಯಾಗಿಲ್ಲ ಎಂದಿದ್ದಾರೆ.
ಬುಧವಾರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ.
ವಿಪಕ್ಷಗಳು 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸುವ ಗುರಿಯಾಗಿಸಿಕೊಂಡಿದ್ದಾರೆ. ಹೀಗಾಗಿ ತಯಾರಿ ನಡೆಯುತ್ತಿದೆ ಎಂಬ ವದಂತಿಗಳು ಹರಡಿವೆ.\
ಇದನ್ನೂ ಓದಿ: ಕೆಆರ್ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ?; ಲೋಕಯುಕ್ತದಿಂದ ಪರಿಶೀಲನೆ!