ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ!
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಅವರು ಪ್ರಮಾಣವಚನ ಬೋದಿಸಿ ಹೂಗುಚ್ಚ ನೀಡಿ ಶುಭಾಶಯ ಕೋರಿದರು.
ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಕರ್ನಾಟಕದ 30ನೇ ಸಿಎಂಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ತಿಳಿಸಿದ್ದಾರೆ. ಎಲ್ಲಾ ನಾಯಕರು ವೇದಿಕೆಗೆ ಬಂದು ಅಭಿನಂದನೆಯನ್ನು ತಿಳಿಸುತ್ತಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಮುಖ್ಯಮಂತ್ರಿಯ ಕಛೇರಿಯ ಮುಂದೆ ಕೂಡ ನಾಮಫಲಕ ಹಾಕಲಾಗಿದೆ.
ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ ಎಂದು ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಿದ ಬೆನ್ನಲ್ಲೇ ಮೂವರು ಡಿಸಿಎಂಗಳನ್ನೂ ಕೂಡ ಆಯ್ಕೆ ಮಾಡಲಾಗಿದೆ. ಸಚಿವರಾದ ಆರ್.ಅಶೋಕ್, ಶ್ರೀರಾಮುಲು ಹಾಗೂ ಗೋವಿಂದ್ ಕಾರುಜೋಳ ಅವರನ್ನ ಉಪಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಲಾಗಿದೆ.