ಅಣ್ಣಾಮಲೈ ಹಾದಿಯಲ್ಲಿ ಮತ್ತೊಬ್ಬ IPS; ಬಿಜೆಪಿ ನಾಯಕರನ್ನು ಭೇಟಿಯಾದ ರವಿ ಚನ್ನಣ್ಣನವರ್!
ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರ ಹಾದಿಯನ್ನೇ ಮತ್ತೊಬ್ಬ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ತುಳಿಯುತ್ತಿದ್ದಾರೆ. ಅವರೂ ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಬಹುದಾ ಎಂದು ಅನುಮಾನಗಳು ಹುಟ್ಟಿಕೊಂಡಿವೆ.
ಇದಕ್ಕೆ ಪುಷ್ಟಿ ನೀಡುವಂತೆ ರವಿ ಡಿ ಚನ್ನಣ್ಣನವರ್ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ಅವರ ಭೇಟಿಯ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರವಿ ಅವರೂ ಕೂಡ ಕೇಸರಿ ಶಿಬಿರಕ್ಕೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೂಲತಃ ಗದಗ ಜಿಲ್ಲೆಯವರಾದ ರವಿ ಡಿ ಚನ್ನಣ್ಣನವರ್ ಮಂಗಳವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಪಕ್ಷ ಸೇರುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಕರ್ನಾಟಕದ ಮಾಧ್ಯಮಕ್ಕೆ ಸಿಂಗಂ ಆಗಿದ್ದ ಅಣ್ಣಾಮಲೈ; ಅಸಲಿಗೆ ಸಾಧಿಸಿದ್ದು ಶೂನ್ಯ!
ಕರ್ನಾಟಕದ ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ರವಿ ಡಿ ಚನ್ನಣ್ಣನವರ್ ಸದ್ಯ ಬೆಂಗಳೂರು ನಗರ ಸಿಐಡಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ತಮ್ಮ ವೃತ್ತಿಯ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾಷಣಗಳು, ಸಲಹೆಗಳ ಮೂಲಕ ಹೆಚ್ಚು ಅಭಿಮಾನಿಗಳನ್ನೂ ರವಿ ಅವರು ಹೊಂದಿದ್ದಾರೆ. ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಎಲ್ಲೆಡೆ ಯುವಜನರನ್ನು ಭೇಟಿ ಮಾಡಿ, ಸಾಕಷ್ಟು ಜನಪ್ರಿಯತೆಯನ್ನೂ ಪಡೆದಿದ್ದಾರೆ.
ಹೀಗಾಗಿ, ಅವರು ಬಿಜೆಪಿ ಸೇರಿ, ಹಳೆ ಮೈಸೂರು ಭಾಗದ ಮೀಸಲು ಕ್ಷೇತ್ರವೊಂದರಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ವರ್ಷ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಕೆ. ಅಣ್ಣಾಮಲೈ ಬಿಜೆಪಿ ಸೇರಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನಿಭವಿಸಿದ ಅವರು, ಇದೀಗ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
ಇದನ್ನೂ ಓದಿ: ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜ್ಯಾಧ್ಯಕ್ಷ!