ಬೆಲೆ ಏರಿಕೆಗೆ ವಿರೋಧ: ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!
ಇಂಧನ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್, ಇದೀಗ ವಿಧಾನ ಮಂಡಲ ಅಧಿವೇಶನದಲ್ಲೂ ಪ್ರತಿಭಟನೆಯನ್ನು ದಾಖಲಿಸಲು ಮುಂದಾಗಿದೆ. ಇಂದಿನಿಂದ (ಸೋಮವಾರ) ಆರಂಭವಾಗುತ್ತಿರುವ 10 ದಿನಗಳ ಅಧಿವೇಶನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿದಿನವೂ ಎತ್ತಿನ ಗಾಡಿಯಲ್ಲಿ ಹೋಗಲು ನಿರ್ಧರಿಸಿದ್ದು, ‘ಎತ್ತಿನ ಗಾಡಿ ಚಲೋ’ ಪ್ರತಿಭಟನೆಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಕೊರೊನಾ ನಿರ್ವಹಣೆ, ಕೊರೊನಾ ಲಸಿಕೆ, ಕೋವಿಡ್ ಸಾವಿನ ಕುರಿತ ಸರ್ಕಾರದ ಸುಳ್ಳು ಅಂಕಿ-ಅಂಶಗಳು, ಕೋವಿಡ್ ಸಂದರ್ಭದಲ್ಲಿ ವಿವಿಧ ಸಮುದಾಯಗಳಿಗೆ ಸರ್ಕಾರ ಘೋಷಿಸಿದ್ದ ಪರಿಹಾರ. ಅತಿವೃಷ್ಟಿ ಸಂತ್ರಸ್ತರ ಮೇಲಿನ ನಿರ್ಲಕ್ಷ್ಯ, ರಾಜ್ಯದ ಅಭಿವೃದ್ಧಿಯಲ್ಲಿ ಆಗಿರುವ ಹಿನ್ನಡೆ ಹಾಗೂ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಅಧಿವೇಶನದಲ್ಲಿ ಕಾಂಗ್ರೆಸ್ ಮುನ್ನಲೆಗೆ ತರಲಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿವಾದಾತ್ಮಕ ಹೇಳಿಕೆಗಳು ಹಾಗೂ ಅವುಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದ ಬಿಜೆಪಿ ಮುಖಂಡರ ಹೇಳಿಕೆಗಳು ಅಧಿವೇಶನದಲ್ಲಿ ಚರ್ಚೆಗೆ ಬರುವ ಸಾಧ್ಯತೆಗಳಿವೆ.
ಅಲ್ಲದೆ, ತರಾತುರಿಯಲ್ಲಿ ಎನ್ಇಪಿ ಜಾರಿಗೆ ಮುಂದಾಗುರುವುದರ ಬಗ್ಗೆ, ಹಾಗೂ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ನಡೆದ ಜಾತಿ ಗಣತಿ ವರದಿ ಸುತ್ತಲೂ ಚರ್ಚೆ ನಡೆಯುವ ಸಾಧ್ಯತೆಗಳಿವೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಂಗಳೂರಿನ ಕುಮಾರಪಾರ್ಕ್ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಲಿದ್ದಾರೆ. ಆ ಮೂಲಕ ಸರ್ಕಾರವನ್ನು ಕಲಾಪದಲ್ಲಿ ತರಾಟೆಗೆ ತೆಗೆದುಕೊಳ್ಳಲು ಸಿದ್ದರಾಮಯ್ಯ ಅವರು ಸಿದ್ಧತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಲಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ತೊರೆಯುವ ವೇಳೆ ಬಿಜೆಪಿ ಹಣದ ಆಮಿಷವೊಡ್ಡಿತ್ತು: ಮಾಜಿ ಸಚಿವ ಶ್ರೀಮಂತ್ ಪಾಟೀಲ್