ಬೆಂಗಳೂರಿನಲ್ಲಿ ಸಾವಿರಾರು ರೈತರ ಪ್ರತಿಭಟನಾ ರ್ಯಾಲಿ : ಟೌನ್ ಹಾಲ್ ಬಳಿ ಬಿಗಿ ಭದ್ರತೆ!
ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶಾದ್ಯಂತ ಬಂದ್ ಗೆ ರೈತರು ಕರೆ ನೀಡಿದ್ದಾರೆ. ದೇಶಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ. ಕರ್ನಾಟಕದಲ್ಲೂ ರೈತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಕಳೆದ ಒಂದು ವರ್ಷದಿಂದ ರೈತರು ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿ ಭಾಗದಲ್ಲಿ ಬೀಡುಬಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಇಲ್ಲಿವರೆಗೂ ಸರ್ಕಾರ ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿಲ್ಲ. ಕೇಂದ್ರ ಸರ್ಕಾರ ರೈತ ನಾಯಕರೊಂದಿಗೆ ಹಲವಾರು ಸುತ್ತಿನ ಮಾತುಕತೆ ಬಳಿಕವೂ ರೈತರ ಬೇಡಿಕೆಗಳು ಈಡೇರದ ಹಿನ್ನೆಲೆ ಇಂದು ಭಾರತ್ ಬಂದ್ ಗೆ ರೈತರು ಕರೆ ನೀಡಿದ್ಧಾರೆ.
ಸುಮನಳ್ಳಿ, ಟಿನ್ ಫ್ಯಾಕ್ಟರಿ ಮೂಲಕ ಸಾವಿರಾರು ರೈತರು ಕಾಲ್ನಡಿಗೆಯಲ್ಲಿ ಟೌನ್ ಹಾಲ್ ಸೇರಲಿದ್ದಾರೆ. ಹೀಗಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಒಂದೆಡೆ ಕೊರೊನಾ ಆರ್ಥಿಕ ಸಂಕಷ್ಟ ಮಧ್ಯೆ ರೈತರು ಬೀದಿಗಿಳಿದು ಹೋರಾಡುತ್ತಿದ್ಧಾರೆ. ಬೆಂಗಳೂರಿನಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್, ಆಟೋ, ಲಾರಿ, ಎಂದಿನಂತೆ ಕಾರ್ಯ ನಿರ್ವಹಿಸಿವೆ.
ಈ ಹಿಂದೆ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತ ಹೋರಾಟಗಾರರು ಇಂದು ಸಿಎಂ ಮನೆಗೂ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಹೀಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸ, ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.