ಹಾನಗಲ್ ಬೈ ಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಘೋಷಣೆ; ನಿಯಾಜ್ ಶೇಕ್ ಕಣಕ್ಕೆ!
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ನಿಯಾಜ್ ಶೇಕ್ ಅವರನ್ನು ಅಭ್ಯರ್ಥಿಯಾಗಿ ಜೆಡಿಎಸ್ ಘೋಷಿಸಿದೆ.
ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನಿಯಾಜ್ ಶೇಕ್ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದರು. ಅವರನ್ನು ಉಪಚುನಾವಣೆಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಜೆಡಿಎಸ್ಗೆ ಕರೆತರಲಾಗಿತ್ತು. ಇದೀಗ, ಉಪಚುನಾವಣೆಗೆ ಅವರು ಕಣಕ್ಕಿಳಿಯುವುದನ್ನು ಫೈನಲ್ ಮಾಡಿರುವ ಜೆಡಿಎಸ್, ನಿಯಾಜ್ ಶೇಕ್ ಅವರಿಗೆ ಬಿ ಫಾರಂ ನೀಡಿದೆ.
ಇನ್ನು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿವೆ. ಬಿಜೆಪಿಯಲ್ಲಿ ಸಂಘಪರಿವಾದಲ್ಲಿ ಗುರುತಿಸಿಕೊಂಡಿರುವ ರಾಜಶೇಖರಗೌಡ ಕಟ್ಟೇಗೌಡ, ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ, ವಿಧಾನಪರಿಷತ್ ಮಾಜಿ ಸದಸ್ಯ ಶಿವರಾಜ್ ಸಜ್ಜನರ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮತ್ತು ಕೃಷ್ಣ ಇಳಿಗೇರ್ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಉಳಿದಂತೆ, ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಶೀಲ್ದಾರ್ ಟಿಕೆಟ್ ಆಕಾಂಕ್ಷಿಗಳ ರೇಸ್ನಲ್ಲಿದ್ದಾರೆ.
ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿಎಂ. ಉದಾಸಿ ಅವರ ಅಕಾಲಿಕ ಮರಣದಿಂದಾಗಿ ಕ್ಷೇತ್ರ ತೆರವಾಗಿತ್ತು. ಕ್ಷೇತ್ರಕ್ಕೆ ಉಪ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ನವೆಂಬರ್ 02 ರಂದು ಫಲಿತಾಂಶ ಹೊರಬೀಳಲಿದೆ.
ಇದನ್ನೂ ಓದಿ: 2023ರ ಚುನಾವಣೆಯಲ್ಲಿ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು: ಹೆಚ್ಡಿ ಕುಮಾರಸ್ವಾಮಿ