ಕೇಂದ್ರ ಸಚಿವರ ಮಗನ ಕಾರು ಹರಿದು ನಾಲ್ವರು ಪ್ರತಿಭಟನಾನಿರತ ರೈತರು ಸಾವು : ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ!
ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹತ್ತಿಸಿದ ಪರಿಣಾಮ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಇದರಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಕಾರಿನಲ್ಲಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಈ ಅಮಾನವೀಯ ಕೃತ್ಯ ಖಂಡಿಸಿ ಇವತ್ತು ದೇಶದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವಂತೆ ರೈತ ಸಂಘಟನೆಗಳು ರೈತರಿಗೆ ಕರೆ ನೀಡಿವೆ.
ಕೇಂದ್ರ ಗೇಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಲಖೀಂಪುರ್ನಲ್ಲಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ರನ್ನು ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಬೆಂಗಾವಲು ವಾಹನಗಳು ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ಕಾರು ಏಕಾಏಕಿ ರೈತರ ಮೇಲೆ ಹರಿದಿದೆ. ಇದರಿಂದ ನಾಲ್ವರ ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಘಟನೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಅಜಯ್ ಮಿಶ್ರಾ, “ ಪ್ರತಿಭಟನೆಯ ಬಗ್ಗೆ ನಮಗೆ ಮೊದಲೇ ತಿಳಿದಿತ್ತು. ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಸಮಾಜಘಾತುಕ ಶಕ್ತಿಗಳು ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿವೆ” ಎಂದು ಹೇಳಿದ್ದಾರೆ.
ಘಟನೆಯನ್ನು ಖಂಡಿಸಿ ರೈತ ಸಂಘಟನೆಗಳು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಕೂಡಲು ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇತ್ತ ಹಿಂಸಾಚಾರವನ್ನು ಖಂಡಿಸಿದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.