ದೀಪಾವಳಿಗೆ ಮಳೆಯ ಅಬ್ಬರ; ನ. 4 ರಿಂದ 6 ರವರೆಗೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆ!
ಶ್ರೀಲಂಕಾ ಭಾಗದಲ್ಲಿರುವ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರತದ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 04 ರಿಂದ ನ. 06ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನ. 06ರ ವರಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 3 ರಿಂದ ಮತ್ತು ನವೆಂಬರ್ 6ರಿಂದ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಹ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸೋಮವಾರ ಕುಕ್ಕೆ ಸುಬ್ರಮಣ್ಯದಲ್ಲಿ 8 ಸೆಂ. ಮೀ. ಮಳೆಯಾಗಿದೆ. ಭಾಗಮಂಡಲದಲ್ಲಿ 5, ಸುಳ್ಯ 4, ಸಕಲೇಶಪುರ 4, ಕಾರ್ಕಳ 3, ಬೆಳ್ತಂಗಡಿ, ಬೆಳಗಾವಿ, ನಂಜನಗೂಡಿನಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ವರ್ಷ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿಯೇ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದವು. ಅದೇ ರೀತಿಯಲ್ಲಿ ಕೆಆರ್ಎಸ್ ಜಲಾಶಯ ಕೂಡ ಸಂಪೂರ್ಣ ಭರ್ತಿಯಾಗಿದ್ದು, ತಮಿಳುನಾಡಿಗೆ ನಿತ್ಯವೂ 10 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. 2009ರಲ್ಲಿ ಅಕ್ಟೋಬರ್ 28ರಂದು ಜಲಾಶಯ ಭರ್ತಿಯಾಗಿತ್ತು. ಬಳಿಕ, ಇದೇ ಮೊದಲ ಬಾರಿಗೆ ಅಕ್ಟೋಬರ್ ಅಂತ್ಯದಲ್ಲಿ ಜಲಾಶಯ ಭರ್ತಿಯಾಗಿದೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರಿನಲ್ಲೇ ಮುಖಭಂಗ; ಹಾನಗಲ್ನಲ್ಲಿ ಕಾಂಗ್ರೆಸ್ ಜಯಭೇರಿ!