ರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಮೃತದೇಹ ಪತ್ತೆ
ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಸಮೀಪದ ಸಿಂಘು ಗಡಿಯ ಬಳಿ ರೈತರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ರೈತನನ್ನು ಪಂಜಾಬ್ನ ಫತೇಘರ್ ಸಾಹಿಬ್ನ ಅಮ್ರೋಹ್ ಜಿಲ್ಲೆಯ ನಿವಾಸಿ ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ.
ಗುರುಪ್ರೀತ್ ಸಿಂಗ್ ಅವರು ಸಿಧುಪುರದ ಭಾರತೀಯ ಕಿಸಾನ್ ಯೂನಿಯನ್ನಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಕುಂಡ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಗುರುಪ್ರೀತ್ ಸಿಂಗ್ ಸಾವಿನ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಾವಿನ ಹಿಂದಿನ ಕಾರಣವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26 ರಿಂದ ಸಿಂಘು ಮತ್ತು ಟಿಕ್ರಿ ಸೇರಿದಂತೆ ಹಲವು ದೆಹಲಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 500 ರೈತರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೂ, ಕೊರೊನಾ, ಚಳಿಗಾಲ, ಮಳೆಗಾಲ, ಬೇಸಿಗೆ ಕಾಲ ಯಾವುದಕ್ಕೂ ಜಗ್ಗದೆ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಬಿಜೆಪಿ ನೇತೃತ್ವದದ ಎನ್ ಡಿ ಎ ಸರ್ಕಾರದ ಅವಧಿ ಕೊನೆಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ.
ಕೇಂದ್ರ ಸರ್ಕಾರ ಕೂಡ ಅಹಂಕಾರದ ಧೋರಣೆಯನ್ನು ಅನುಸರಿಸುತ್ತಿದ್ದು, 11 ಸುತ್ತಿನ ಮಾತುಕತೆ ನಡೆಸಲಾಗಿದ್ದರೂ ಸರ್ಕಾರ ತನ್ನ ಧೋರಣೆಯಿಂದ ಹಿಂದೆ ಸರಿದಿಲ್ಲ. ಈ ನಡುವೆ, ಜನವರಿ 26ರಂದು ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ದೆಹಲಿ ಚಲೋ ನಡೆಸಿದರು. ಈ ವೇಳೆ, ಕೆಲವು ಬಿಜೆಪಿ ಬೆಂಬಲಿಗರು ಎನ್ನಲಾದವರು ಸೃಷಿಸಿದ್ದ ಹಿಂಸಾಚಾರದಿಂದ ಒಬ್ಬ ರೈತ ಸಾವನ್ನಪ್ಪಿದ್ದರು. ಈ ನಂತರ, ಸರ್ಕಾರದ ವಿರುದ್ದ ಸಿಟ್ಟಾದ ರೈತರು ಸರ್ಕಾರದೊಂದಿಗಿನ ಸಭೆಗೆ ಭಾಗಿಯಾಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.
ಇತ್ತೀಚೆಗೆ ಲಿಕಿಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವರ ಮಗನ ಕಾರು ಹತ್ತಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ: ಕೃಷಿ ಕಾಯ್ದೆ ವಿರುದ್ದದ ಪ್ರತಿಭಟನೆಯಲ್ಲಿ 500 ರೈತರ ಸಾವು; ಕುಗ್ಗದ ರೈತರು: ರಾಹುಲ್ಗಾಂಧಿ