ಹೊಸ ವರ್ಷದ ವೇಳೆಗೆ ನೈಟ್ ಕರ್ಫ್ಯೂ, ಲಾಕ್ಡೌನ್?; ಸಿಎಂ ಬೊಮ್ಮಾಯಿ ಸ್ಪಷ್ಟನೆ
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ, ಒಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ್ದು, ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಪ್ರಮುಖವಾಗಿ, ಕೇರಳ ವಿದ್ಯಾರ್ಥಿಗಳು ಹಾಗೂ ಮಹಾರಾಷ್ಟ್ರ ಸೇರಿದಂತೆ ಗಡಿಭಾಗದಲ್ಲಿ ಬರುವವರಿಗೆ ಆರ್ಟಿಪಿಸಿಆರ್ ಟೆಸ್ಟಿಂಗ್ಅನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಲಾಕ್ಡೌನ್ ಮಾಡಲಾಗುತ್ತದೆಯೇ ಎಂದು ಭಾರೀ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಬಗ್ಗೆ ಮುಂದಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಾರದ ಬಳಿಕ ಕ್ರಿಸ್ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವನ್ನು ಜಾರಿಗೊಳಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ನೈಟ್ ಕರ್ಫ್ಯೂ ಹಾಗೂ ಲಾಕ್ಡೌನ್ ಮಾಡಬಾರದು ಎಂದರೆ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಭೆ-ಸಮಾರಂಭಗಳು, ಕಾರ್ಯಕ್ರಮಗಳು, ಜಾತ್ರೆ, ಮದುವೆ ಸೇರಿದಂತೆ ಹೆಚ್ಚು ಜನರ ಸೇರುವೆಡೆ ಕಡಿವಾಣ ಹಾಕಬೇಕು. ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರುವ ಎಂದು ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎಂಕೆ ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ.
ತಾಂತ್ರಿಕ ಸಲಹಾ ಸಮಿತಿಯು ಶುಕ್ರವಾರ ಅಥವಾ ಶನಿವಾರ ಸರ್ಕಾರಕ್ಕೆ ಸಮಿತಿ ಶಿಫಾರಸ್ಸುಗಳನ್ನು ನೀಡಲಿದ್ದು, ಕ್ರಿಸ್ಮಸ್, ಹೊಸ ವರ್ಷಾಚರಣೆಯ ವೇಳೆಗೆ ನೈಟ್ ಕರ್ಫ್ಯೂ, ಲಾಕ್ಡೌನ್ ಮಾಡುವಂತಹ ಪರಿಸ್ಥಿತಿ ಎದುರಾಗದಂತೆ ಗೈಡ್ಲೈನ್ಸ್ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.
ಇದನ್ನೂ ಓದಿ: ನೋಟ್ಸ್ ನೀಡಲು ಬಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಆರೋಪಿ ಬಂಧನ