ಫ್ಯಾಕ್ಟ್ಚೆಕ್: 2024ರ ಚುನಾವಣೆಗೆ BJP ಮತ್ತು ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂಬುದು ಎಷ್ಟು ನಿಜ?
BJP ಮತ್ತು ಕಾಂಗ್ರೆಸ್ ನಾಯಕರು ರಹಸ್ಯ ಸಭೆಯ ಮೂಲಕ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
“BJP ಮತ್ತು ಕಾಂಗ್ರೆಸ್ನ ರಹಸ್ಯ ಸಭೆ. 2024ರಲ್ಲಿ ಕಾಂಗ್ರೆಸ್ ಮತ್ತೆ BJP ಗೆ ಪ್ರಧಾನಿಯಾಗಲು ಅವಕಾಶ ನೀಡುತ್ತದೆ. ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸಬೇಕು. ಕಾಂಗ್ರೆಸ್ಗೆ ಮತ ಹಾಕಿದರೆ ಮುಸ್ಲಿಮರ ಮತ ಹಾಳಾಗುತ್ತದೆ”. ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ಅನ್ನು ಹಂಚಿಕೊಳ್ಳಲಾಗಿದೆ.
Secret meeting of BJP Congress. Congress will give BJP a chance to become the Prime Minister in 2024. Muslims should boycott Congress. The vote of Muslims will be spoiled if voted for Congress. because here's the deal pic.twitter.com/5Y1ZC2gLiH
— NAFISH AHMAD (@INDnafeesahmad) January 16, 2023
ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಇದ್ದಾರೆ. ಈ ರಹಸ್ಯ ಸಭೆ ಮುಂಬರುವ 2024ರ ಚುನಾವಣೆ ಹಿನ್ನಲೆಯಲ್ಲಿ ನಡೆಸಲಾಗಿದೆ ಎಂದು ಪ್ರತಿಪಾದಿಸಿ ಪೋಸ್ಟ್ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್:
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೋದ ಕೀವರ್ಡ್ಗಳನ್ನು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಸರ್ಚ್ ಮಾಡಿದಾಗ, ಆಗಸ್ಟ್ 12, 2021 ರ ಹಿಂದೂಸ್ತಾನ್ ಟೈಮ್ಸ್ನ ವರದಿಯೊಂದು ಲಭ್ಯವಾಗಿದ್ದು, ವರದಿಯ ಪ್ರಕಾರ, ಲೋಕಸಭೆಯ ಚಳಿಗಾಲದ ಅಧಿವೇಶನವನ್ನು ಮುಂದೂಡಿದ ಕಾರಣಕ್ಕೆ ಮತ್ತು ಹಲವು ಗೊಂದಲಗಳನ್ನು ಚರ್ಚಿಸಲು ಲೋಕಸಭಾ ಸ್ಪೀಕರ್ ಅವರು ಸರ್ವಪಕ್ಷಗಳ ಸಭೆಯನ್ನು ಕರೆದ ಸಂದರ್ಭದ ಚಿತ್ರ ಎಂದು ವರದಿ ಮಾಡಿದೆ.
ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 2021 ರಲ್ಲಿ ಮುಕ್ತಾಯಗೊಂಡ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ವಿವಿಧ ಪಕ್ಷಗಳ ರಾಜಕೀಯ ಮುಖಂಡರೊಂದಿಗೆ ಸಭೆ ಕರೆದ ಕುರಿತು ಇತರ ಹಲವು ಸುದ್ದಿವಾಹಿನಿಗಳು ವರದಿ ಮಾಡಿವೆ. ಅಂತಹ ವರದಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ಚೇಂಬರ್ನಲ್ಲಿ ಸರ್ವ ಪಕ್ಷದ ನಾಯಕರ ಸಭೆಯನ್ನು ಕರೆಯಲಾಗಿತ್ತು.
ಆಗಸ್ಟ್ 12, 2021 ರ ಎನ್ಡಿಟಿವಿ ವರದಿಯ ಪ್ರಕಾರ, ಪಿಎಂ ಮೋದಿ ಮತ್ತು ಸೋನಿಯಾ ಗಾಂಧಿ ಅವರ ಜೊತೆಗೆ, “ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ತೃಣಮೂಲ ಕಾಂಗ್ರೆಸ್, ಅಕಾಲಿದಳ, ವೈಎಸ್ಆರ್ ಕಾಂಗ್ರೆಸ್ ಮತ್ತು ಬಿಜೆಡಿ ನಾಯಕರು ಸಹ ಇದ್ದರು ಎಂದು ವರದಿಯಾಗಿದೆ”. ಆದರೆ ಸೋನಿಯಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರಾದರೂ ಪರಸ್ಪರ ಮಾತನಾಡಲಿಲ್ಲ. ಎಂದು NDTV ವರದಿ ಮಾಡಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಆಗಸ್ಟ್ 2021 ರಲ್ಲಿ ಸಂಸತ್ತಿನ ಮುಂಗಾರು ಅಧಿವೇಶನದ ಮುಕ್ತಾಯದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಕರೆದಿದ್ದ ವಿವಿಧ ರಾಜಕೀಯ ಪಕ್ಷಗಳ ನಾಯಕರ ಸಭೆಯ ದೃಶ್ಯಗಳನ್ನು, 2024 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ “ರಹಸ್ಯ” ಸಭೆಯ ಫೋಟೋ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್ಚೆಕ್: ಪ್ರಾಧಾನಿ ಮೋದಿ ಪಠಾಣ್ ಚಿತ್ರದ ಟ್ರೇಲರ್ ನೋಡಿದ್ದು ನಿಜವೇ?