ಫ್ಯಾಕ್ಟ್ಚೆಕ್: ಮಹಿಳೆಯರ ಉಚಿತ ಬಸ್ ಪ್ರಯಾಣ ಆಗಸ್ಟ್ 15 ರಿಂದ ರದ್ದು ಎಂಬುದು ಸುಳ್ಳು : KSRTC ಸ್ಪಷ್ಟನೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತಿದೆ. ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC), ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.
ಈ ಯೋಜನ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು ಇದೇ ಆಗಸ್ಟ್ 15 ರಿಂದ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ರದ್ದಾಗಲಿದೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
Raghavendra S Raghu ಎಂಬ ಫೇಸ್ಬುಕ್ ಬಳಕೆದಾರರು ಪೋಸ್ಟ್ಅನ್ನು ಹಂಚಿಕೊಂಡಿದ್ದು ಆಗಸ್ಟ್ 15ರಿಂದ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಉಚಿತ ಪ್ರಯಾಣವನ್ನು ಕರ್ನಾಟಕ ಹೈ ಕೋರ್ಟ್ ತೀರ್ಪು ನೀಡಿದೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಉಚಿತ ಪ್ರಯಾಣವನ್ನು ಹೈಕೋರ್ಟ್ ರದ್ದು ಪಡಿಸಿದೆಯೇ ಎಂದು ಪೋಸ್ಟ್ನಲ್ಲಿ ಮಾಡಿದ ಪ್ರತಿಪಾಯನ್ನು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯಂತೆ ಕರ್ನಾಟಕ ಹೈಕೋರ್ಟ್ ಅಗಸ್ಟ್ 15 ರಿಂದ ಮಹಿಳೆಯರಿಗೆ ನೀಡುತ್ತಿದ್ದ ಉಚಿತ ಬಸ್ ಪ್ರಯಾಣವನ್ನು ರದ್ದು ಪಡಿಸಿರುವುದು ನಿಜವೇ ಎಂದು ಪರಿಶೀಲಿಸಲು ಕೆಎಸ್ಆರ್ಟಿಸಿ (KSRTC) ಕೇಂದ್ರ ಕಚೇರಿಗೆ ಕರೆಮಾಡಿ ವಿಚಾರಿಸಿದಾಗ, ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಶಕ್ತಿ ಯೋಜನೆಯನ್ನು ಅಗಸ್ಟ್ 15 ರಿಂದ ರದ್ದು ಪಡಿಸುವಂತೆ ನಿರ್ದೇಶನಗಳು ಬಂದಿಲ್ಲ, ಅಂತಹ ಯಾವುದೇ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನೀಡಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಕಲಿ ಸುದ್ದಿಯಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕೇಂದ್ರ ಕಚೇರಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ಏನ್ ಸುದ್ದಿ.ಕಾಂಗೆ ಪ್ರತಿಕ್ರಿಸಿದ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಶಕ್ತಿ ಯೋಜನೆಗೆ ಹೈಕೋರ್ಟ್ ತಡೆ ನೀಡಿಲ್ಲ ಮತ್ತು ಈ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರವೂ ನಿರ್ಧರಿಸಿಲ್ಲ. ಈ ಬಗ್ಗೆ ಯಾವುದೇ ಆದೇಶ ಪ್ರಕಟವಾಗಿಲ್ಲ. ‘ಶಕ್ತಿ ಯೋಜನೆ ಆ.15ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು. ಇದನ್ನು ಜನರು ನಂಬಬಾರದು. ಈ ಯೋಜನೆ ಸ್ವಾತಂತ್ರ್ಯ ದಿನಾಚರಣೆಯ ಬಳಿಕವೂ ಮುಂದುವರಿಯಲಿದೆ’ ಎಂದು ಮಾಹಿತಿ ನೀಡಿದ್ದಾರೆ.
ಉಚಿತ ಪ್ರಯಾಣದಿಂದ ಸಾರಿಗೆ ನಿಗಮಗಳಿಗೆ ಲಾಭ
ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಭೇಟಿ ನೀಡಲು ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಹೀಗಾಗಿ ಹೆಚ್ಚು ಆದಾಯ ಬಂದಿದೆ. ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೇಗುಲ, ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿಏರಿಕೆ ಕಂಡಿದೆ. ಅಲ್ಲಿನ ವ್ಯಾಪಾರ, ವಹಿವಾಟು ಚೇತರಿಕೆಗೆ ಕಾರಣ ಎನ್ನಲಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು ಇದನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿಯನ್ನು ಹರಡಲಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್ಚೆಕ್ : ಹಿಂದೂಗಳನ್ನು ಟಾರ್ಗೆಟ್ ಮಾಡಿ ಏಡ್ಸ್ ಇಂಜೆಕ್ಷನ್ ನೀಡಲಾಗುತ್ತಿದೆಯೇ?