FACT CHECK | ಗದಗ ಜಿಲ್ಲೆಯ ಹೈವೆಯೊಂದರಲ್ಲಿ ಕಾಣಿಸಿಕೊಂಡ ಚಿರತೆಯ ದೃಶ್ಯಗಳನ್ನು ಮೈಸೂರು-ಬೆಂಗಳೂರು ಹೈವೆಯದ್ದು ಎಂದು ತಪ್ಪಾಗಿ ಹಂಚಿಕೆ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ನಿಡ್ಲಘಟ್ಟ ಸರ್ವಿಸ್ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ.
ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು, ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವಿಡಿಯೋದ ಕೀ ಫ್ರೇಮ್ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, ಎಪ್ರಿಲ್ 17, 2023ರಂದು ಇಟಿವಿ ಭಾರತ್ ಮಾಡಿದ ವರದಿ ಲಭ್ಯವಾಗಿದೆ.
“ಗದಗ : ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ” ಎಂಬ ಶೀರ್ಷಿಕೆಯೊಂದಿಗೆ ವರದಿ ಪ್ರಕಟಿಸಲಾಗಿದೆ. ವರದಿ ಪ್ರಕಾರ, ಇಲ್ಲಿಯ ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಚಿರತೆ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಸಾವದಾನವಾಗಿ ಮಲಗಿರುವಂತೆ ಕಂಡು ಬಂದಿದ್ದು, ಪ್ರಯಾಣಿಕರೊಬ್ಬರು ಚಿರತೆಯ ದೃಶ್ಯಗಳನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ ಎಂದು ಹೇಳಲಾಗಿದೆ.
ಮತ್ತಷ್ಟು ಸರ್ಚ್ ಮಾಡಿದಾಗ ವಿಸ್ತಾರ ನ್ಯೂಸ್ ಎಪ್ರಿಲ್ 17, 2023ರಂದು ವಿಡಿಯೋವನ್ನು ಅಪ್ಲೋಡ್ ಮಾಡಿದೆ. ಗದಗದ ಬಿಂಕದಕಟ್ಟಿಯಲ್ಲಿ ನಡುರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ.
ಈ ಹಿಂದೆಯೂ ಇದೇ ವಿಡಿಯೋವನ್ನು ಹಂಚಿಕೊಂಡು ಮೈಸೂರಿನ ಹೈವೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಆತಂಕಗೊಂಡಿದ್ದಾರೆ ಎಂದು ಜೀ ನ್ಯೂಸ್ ವಿಡಿಯೋವನ್ನು ಅಪ್ಲೋಡ್ ಮಾಡಿತ್ತು. ಆದರೆ ಈ ದೃಶ್ಯಾವಳಿಗಳು ಗದಗ ಜಿಲ್ಲೆಯ ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬುದು ವಾಸ್ತವ.
ಒಟ್ಟಾರೆಯಾಗಿ ಹೇಳುವುದಾದರೆ, ಗದಗ ಜಿಲ್ಲೆಯ ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಮೂಡಿಸಿತ್ತು. ಇದನ್ನು ಪ್ರಯಾಣಿಕರೊಬ್ಬರು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಬೆಂಗಳೂರಿನ ನಗರತ್ ಪೇಟೆಯ ಜುಮ್ಮಾ ಮಸೀದಿ ಬಳಿ ನಡೆದ ಘಟನೆಗೆ ಹಿಂದೂ ಮುಸ್ಲಿಂ ಎಂದು ಕೋಮು ಬಣ್ಣ ಹಚ್ಚಿದ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್