FACT CHECK | KPSC ಪರೀಕ್ಷೆ ಬಗ್ಗೆ ಸುಳ್ಳು ಪೋಸ್ಟ್ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ
“ಕರ್ನಾಟಕದಲ್ಲಿ KPSC ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ, ರಾಹುಲ್ ಗಾಂಧಿ ಮೌನವಾಗಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ತಮ್ಮ ಎಕ್ಸ್ ಖಾತೆಯ ಮೂಲಕ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 27ರಂದು ನಡೆಯಲಿರುವ ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಗುಂಪೊಂದು ಆಗಸ್ಟ್ 24 ರಂದು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಆಗುತ್ತಿರುವ ಹಗರಣಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ಶೂಗಳನ್ನು ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರನೇ ಬಾರಿ ಫೇಲ್ ಆಗಿರುವ ರಾಹುಲ್ ಗಾಂಧಿ, ಇತ್ತೀಚೆಗಷ್ಟೇ ಸ್ವಚ್ಛ ಪರೀಕ್ಷೆಗಳ ಹೋರಾಟಗಾರ ಎಂದು ಬಿಂಬಿಸಿಕೊಂಡಿದ್ದರು. ಆದರೆ, ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿಯೇ ಪೇಪರ್ ಸೋರಿಕೆಯಾಗುತ್ತಿರುವ ಬಗ್ಗೆ ಮೌನವಾಗಿದ್ದಾರೆ” ಎಂದು ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ. ಹಾಗಿದ್ದರೆ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಪೋಸ್ಟ್ ಮೂಲಕ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಅಮಿತ್ ಮಾಳವಿಯಾ ಹಂಚಿಕೊಂಡಿರುವ ಫೋಟೊವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 27ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಆಗಸ್ಟ್ 24ರಂದು ಆಕಾಂಕ್ಷಿಗಳು ಶೂ ಪಾಲಿಶ್ ಮಾಡುವ ಮೂಲಕ ಪ್ರತಿಭಟನೆಯನ್ನು ಸುದ್ದಿಯಾಡಿದ ಪ್ರಜಾವಾಣಿಯ ವರದಿಯೊಂದು ಲಭ್ಯವಾಗಿದೆ.
ಈ ಪ್ರತಿಭಟನೆಯ ಬಗ್ಗೆ ಪ್ರಜಾವಾಣಿ ವರದಿ ಮಾಡಿದ್ದನ್ನು ಇಲ್ಲಿ ಓದಬಹುದು. ಕನ್ನಡದ ಬಹುತೇಕ ಮಾಧ್ಯಮಗಳು ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ವರದಿ ಮಾಡಿವೆಯೇ ಹೊರತು, ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಯಾವುದೇ ವರದಿಗಳಿಲ್ಲ.
ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳ ಸಣ್ಣ ಗುಂಪೊಂದು ಪ್ರತಿಭಟನೆ ಮಾಡಿದ ಫೋಟೋ ಬಳಸಿಕೊಂಡು ಕರ್ನಾಟಕದಲ್ಲಿ ಕೆಪಿಎಸ್ಸಿ ಪರೀಕ್ಷೆ ಸೋರಿಕೆಯಾಗಿದೆ ಎಂದು ತಿರುಚಿದ ಅಮಿತ್ ಮಾಳವಿಯಾ ಸುಳ್ಳು ಸುದ್ದಿ ಹರಡುತ್ತಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಹಲವು ಬಾರಿ KPSC ಪರೀಕ್ಷೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಕಂಗಾಲಾಗಿ ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿರುವ ಘಟನೆಯನ್ನು ಪತ್ರಿಕೆ ಸೋರಿಕೆಯಾಗಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಸುಳ್ಳು ಪೋಸ್ಟ್ಅನ್ನು ಹಂಚಿಕೊಳ್ಳುತ್ತಿದ್ದಾರೆ. ಸುಳ್ಳು ಸುದ್ದಿ ಹರಡುತ್ತಿರುವ ಅಮಿತ್ ಮಾಳವಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸುತ್ತಿದ್ದಾರೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಮನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಫೋಟೋ ಎಂದು ಎಡಿಟ್ ಫೋಟೊ ಹಂಚಿಕೆ