‘ಕೈ’ಯಿಂದ ಕಮಲ ಹಿಡಿದ ಕೆ.ಸಿ.ರಾಮಮೂರ್ತಿ ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ…
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಿಂದ ಕೆ.ಸಿ.ರಾಮಮೂರ್ತಿ ಅವರು 2ನೇ ಬಾರಿಗೆ ರಾಜ್ಯಸಭೆಗೆ ಮರು ಆಯ್ಕೆಯಾದಂತಾಗಿದೆ.
ರಾಜ್ಯಸಭೆಗೆ ಡಿಸೆಂಬರ್ 12ರಂದು ಚುನಾವಣೆ ನಡೆಯಬೇಕಿತ್ತು. ಬಿಜೆಪಿಯಿಂದ ಕೆ.ಸಿ. ರಾಮಮೂರ್ತಿ ಹೊರತುಪಡಿಸಿ ಬೇರೆ ಯಾರೂ ಕೂಡ ಉಮೇದುವಾರಿಕೆ ಸಲ್ಲಿಸಿರಲಿಲ್ಲ. ಹೀಗಾಗಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ.ಸಿ.ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಘೋಷಿಸಿದ್ದಾರೆ. ಇನ್ನು ಕೆ.ಸಿ. ರಾಮಮೂರ್ತಿ ಅವರಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು ನಿವಾಸಿಯಾಗಿರುವ ಕೆ.ಸಿ.ರಾಮಮೂರ್ತಿ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಕೆ.ಸಿ.ರಾಮಮೂರ್ತಿ ಅವರನ್ನು ಕಾಂಗ್ರೆಸ್ 2016ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಇದೀಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಎರಡನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ…