ಹಾಸನದಲ್ಲಿ 16 ಸೋಂಕಿತರು: ಹಸಿರು ವಲಯದಿಂದ ಕೆಂಪು ವಲಯದತ್ತ ಮುಖ ಮಾಡಿದ ಜಿಲ್ಲೆ
ಹಾಸನ ಜಿಲ್ಲೆಯಲ್ಲಿ ಇಂದು ಏಳು ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕು ಪತ್ತೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ. ಮಾಧುಸ್ವಾಮಿ ಅವರು ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಇಂದು ಮಧ್ಯಾಹ್ನದವರೆಗೂ ಮೂರು ಕೊರೋನಾ ಪ್ರಕರಣಗಳು ವರದಿಯಾಗಿದ್ದವು. ಮಧ್ಯಾಹ್ನದ ಬಳಿಕ ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಇಂದು ಏಳು ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮೇ 12ರಂದು 5, ಮೇ 13 ರಂದು 4 ಪ್ರಕರಣಗಳು ವರದಿಯಾಗಿದ್ದವು. ನಿನ್ನೆವರೆಗೆ ಒಟ್ಟು 9 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಒಟ್ಟು 7 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈವರೆಗೂ ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣಗಳಲ್ಲಿ 12 ಪ್ರಕರಣಗಳು ಚನ್ನರಾಯಪಟ್ಟಣ, 2 ಹೊಳೆನರಸೀಪುರ ಹಾಗೂ ಅರಕಲಗೂಡಿನಲ್ಲಿ 2 ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 16 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಚನ್ನರಾಯಪಟ್ಟಣದಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಈ ತಾಲೂಕಿನಲ್ಲಿ ಲಾಕ್ಡೌನ್ ನಿಯಮಗಳನ್ನು ಕಠಿಣವಾಗಿ ಜಾರಿಗೆ ತರುವಂತೆ ಎಂಎಲ್ಸಿ ಗೋಪಾಲಸ್ವಾಮಿ ಅವರು ಸಚಿವ ಮಾಧುಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.