ದೇಶದ್ರೋಹ ಆರೋಪ ಹೊತ್ತಿರುವ ಅಮೂಲ್ಯ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲು ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವರ್ಗಾಹಿಸಲು ಕೋರಿ ಕರ್ನಾಟಕ ಹೈ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಮಂಡ್ಯ ಮೂಲದ ವಕೀಲ ಎಚ್ ಎಲ್ ವಿಶಾಲಾ ರಘು ಎನ್ನುವವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೈ ಕೋರ್ಟ್ಅರ್ಜಿಯ ವಿಚಾರಣೆಯನ್ನು ಇನ್ನೂ ಕೈಗೆತ್ತುಕೊಂಡಿಲ್ಲ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಲಾಗಿದ್ದ ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ವೇದಿಕೆ ಏರಿದ್ದ ಅಮೂಲ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆದರೆ, ಪ್ರಕರಣಕ್ಕೆ ಸಂಬಂಧಿಸಿ ಜಾರ್ಜ್ ಸಲ್ಲಿಸುವಲ್ಲಿ ಪೊಲೀಸರು ವಿಳಂಬ ಮಾಡಿದ ಕಾರಣದಿಂದಾಗಿ, ಆಕೆ ಜಾಮೀನು ಪಡೆದು ಹೊರ ಬಂದಿದ್ದಾರೆ.
ಜಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ತನಿಖಾ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಬೇಕು ಮತ್ತು ಆಕೆಗೆ ನೀಡಲಾದ ಜಾಮೀನು ರದ್ದುಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಅರ್ಜಿಯನ್ನು ದಾಖಲಿಸಿಕೊಂಡಿರುವ ಹೈ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುವುದು ಬಾಕಿ ಇದೆ.
ಅಮೂಲ್ಯ ಲಿಯೋನಾ ವಿರುದ್ಧ ಸರ್ಕಾರದ ಪರವಾಗಿ ವಾದಿಸಲು ಸರ್ಕಾರ ಐ ಎಸ್ ಪ್ರಮೋದ್ ಚಂದ್ರ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿದೆ.