ಉತ್ತರ ಪ್ರದೇಶದಲ್ಲಿ ಚುನಾವಣಾ ಕೆಲಸದಲ್ಲಿ ಭಾಗಿಯಾಗಿದ್ದ 135 ಸಿಬ್ಬಂದಿಗಳು ಸಾವು; ಮತ ಎಣಿಕೆಯನ್ನು ಮುಂದೂಡುವಂತೆ ಸುಪ್ರೀಂ ಆದೇಶ!
ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಕೆಲಸ ಮಾಡಿದ್ದ 135 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಹರಡಲು ಚುನಾವಣಾ ಪ್ರಕ್ರಿಯೆಗೆ ನಿಯೋಜಿಸಲಾಗಿದ್ದ ಶಿಕ್ಷಕರೇ ಕಾರಣ ಎಂದು ಹೇಳಲಾಗುತ್ತಿದೆ.
ಉತ್ತರ ಪ್ರದೇಶದಲ್ಲಿ ಪಂಚಾಯತಿಗಳಿಗೆ ಏಪ್ರಿಲ್ 19ರಂದು ಮತದಾನ ನಡೆದಿತ್ತು. ಮತದಾನ ಪ್ರಕ್ರಿಯೆಗೆ ನಿಯೋಜಿಸಲಾಗಿದ್ದ ಶಿಕ್ಷಕರು ಸೇರಿದಂತೆ 135 ಸಿಬ್ಬಂದಿಗಳು ಇದೂವರೆಗೂ ಸಾವನ್ನಪ್ಪಿದ್ದಾರೆ. ಅಲ್ಲದೆ, ಹಲವಾರು ಮಂದಿ ಕೊರೊನಾಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ಪ್ರಕರಣಗಳು ಏರುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಮತ ಮಣಿಕೆಯನ್ನು ಮುಂದೂಡಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮತದಾನ ಮುಗಿದ ನಂತರ ಮೂರು ದಿನಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಚುನಾವಣೆಗೂ ಮುನ್ನ ಮತದಾನ ನಡೆದ 18 ಜಿಲ್ಲೆಗಳಲ್ಲಿ ಕೊರೊನಾ ದರವು 21% ಇತ್ತು. ಮತದಾನದ ನಂತರ ಕಡಿಮೆ ಅವಧಿಯಲ್ಲಿ 29%ಗೆ ಏರಿಕೆಯಾಗಿದೆ ಎಂದು ವರದಿ ಮಾಡಲಾಗಿದೆ.
ಬಿಜೆಪಿಯ ಹಲವು ಸಂಸದರು, ಶಾಸಕರು ಸೇರಿದಂತೆ ವಿರೋಧ ಪಕ್ಷಗಳು ಮತ್ತು ಹಲವು ಸಂಘಟನೆಗಳ ಪ್ರಮುಖರು ಚುನಾವಣೆಯನ್ನು ಮುಂದೂಡುವಂತೆ ಒತ್ತಾಯಿಸಿದ್ದರು. ಆದರೆ, ಈ ಒತ್ತಾಯಕ್ಕೆ ಚುನಾವಣಾ ಆಯೋಗ ಮಣೆ ಹಾಕಲಿಲ್ಲ.
ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತ್ತು.
ಶುಕ್ರವಾರ ಉತ್ತರ ಪ್ರದೇಶದಲ್ಲಿ 34,626 ಪ್ರಕರಣಗಳು ದೃಢಪಟ್ಟಿವೆ.
ಇದನ್ನೂ ಓದಿ: ಭಾರತವನ್ನು ಮತ್ತೆ ಲಾಕ್ಡೌನ್ ಮಾಡಬೇಕು; ಸೇನೆಯ ನೆರವು ಪಡೆಯಬೇಕು: ಅಮೆರಿಕಾ ವೈದ್ಯಕೀಯ ಸಲಹೆಗಾರ ಸೂಚನೆ!